Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ | ಒತ್ತಡದ ಬದುಕಿಗೆ ಯೋಗ-ಧ್ಯಾನ ಮದ್ದು : ಬಸವರಾಜು ಸಲಹೆ

---Advertisement---

ಚಿತ್ರದುರ್ಗ. ಏ.02: ಪೊಲೀಸ್ ಇಲಾಖೆಯಲ್ಲಿ ಕೆಲಸದ ಒತ್ತಡ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಿಬ್ಬಂದಿಗಳು ಮಾನಸಿಕ ಶಾಂತಿ ಹಾಗೂ ದೈಹಿಕ ಆರೋಗ್ಯಕ್ಕಾಗಿ ಯೋಗ ಮತ್ತು ಧ್ಯಾನವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಭಾರ  ಪೊಲೀಸ್   ಸಬ್ ಇನ್ಸ್‍ಪೆಕ್ಟರ್ ಎಲ್.ಆರ್. ಬಸವರಾಜ್ ಸಲಹೆ ನೀಡಿದರು.

 

ನಗರದ  ಪೊಲೀಸ್  ಕವಾಯತು ಮೈದಾನದಲ್ಲಿ ಗುರುವಾರ ಜಿಲ್ಲಾ  ಪೊಲೀಸ್   ಇಲಾಖೆ ಹಮ್ಮಿಕೊಂಡಿದ್ದ ‘ಕರ್ನಾಟಕ ರಾಜ್ಯ  ಪೊಲೀಸ್  ಧ್ವಜ ಹಾಗೂ ಕಲ್ಯಾಣ ದಿನಾಚರಣೆ’ಯಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

 

1993ರಲ್ಲಿ ನಾನು ಭರಮಸಾಗರ ಠಾಣೆಯಲ್ಲಿದ್ದಾಗ ಕೇವಲ 15 ಜನ ಸಿಬ್ಬಂದಿ 98 ಹಳ್ಳಿಗಳ ವ್ಯಾಪ್ತಿ ನೋಡಿಕೊಳ್ಳುತ್ತಿದ್ದೆವು. ಅಂದು ಅಪರಾಧಗಳ ಸಂಖ್ಯೆ ಕಡಿಮೆ ಇತ್ತು, ನೆಮ್ಮದಿಯಿಂದ ಕೆಲಸ ಮಾಡುತ್ತಿದ್ದೆವು. ಆದರೆ ಇಂದು ಸಿಬ್ಬಂದಿ ಸಂಖ್ಯೆ 65ಕ್ಕೇರಿದ್ದರೂ, ಕೆಲಸದ ಒತ್ತಡ ಮಾತ್ರ ಹತ್ತಾರು ಪಟ್ಟು ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

 

ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರನ್ನು ಪ್ರೀತಿ ಮತ್ತು ತಾಳ್ಮೆಯಿಂದ ನಡೆಸಿಕೊಳ್ಳಿ. ಅವರ ಸಮಸ್ಯೆಗಳನ್ನು ಶಾಂತವಾಗಿ ಆಲಿಸಿ ಕಾನೂನು ಚೌಕಟ್ಟಿನಲ್ಲಿ ನೆರವು ನೀಡಿ. ಪೊಲೀಸರು ನೀಡುವ ಗೌರವವೇ ಇಲಾಖೆಗೆ ಸಿಗುವ ದೊಡ್ಡ ಹೆಗ್ಗಳಿಕೆ. ಠಾಣೆಯ ಸಿಬ್ಬಂದಿಗಳೆಲ್ಲರೂ ಒಂದು ಕುಟುಂಬದಂತೆ ತಂಡವಾಗಿ ಕೆಲಸ ಮಾಡಿದರೆ ಅಪರಾಧ ಪತ್ತೆ ಹಚ್ಚುವುದು ಸುಲಭವಾಗುತ್ತದೆ. ಇಂದು ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಸಿಬ್ಬಂದಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ತರಬೇತಿ ನೀಡುವ ಅಗತ್ಯವಿದೆ ಎಂದರು.

 

ಕೆಳಹಂತದ ಪೊಲೀಸ್ ಸಿಬ್ಬಂದಿ ಅನಿವಾರ್ಯ ಕಾರಣಗಳಿಗಾಗಿ ರಜೆ ಕೇಳಿದಾಗ ಹಿರಿಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಇದು ಅವರ ಕೆಲಸದ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ಸಲಹೆ ನೀಡಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಮಾತನಾಡಿ,  ಪೊಲೀಸ್  ಇಲಾಖೆಯು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧ ಹಾಗೂ ಅನುಕರಣೀಯ. ನಿವೃತ್ತ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗೌರವಿಸುವ ಇಲಾಖೆಯ ಈ ಸಂಪ್ರದಾಯ ಎಲ್ಲರಿಗೂ ಮಾದರಿಯಾಗಿದೆ ಎಂದರು.

 

ಹಬ್ಬ-ಹರಿದಿನಗಳಲ್ಲಿ ಎಲ್ಲಾ ಇಲಾಖೆಯ ನೌಕರರು ರಜೆ ಪಡೆದು ಕುಟುಂಬದೊಂದಿಗೆ ಸಂಭ್ರಮಿಸಿದರೆ,  ಪೊಲೀಸ್   ಸಿಬ್ಬಂದಿ ಮಾತ್ರ ಸಾರ್ವಜನಿಕರ ರಕ್ಷಣೆಗಾಗಿ ಮೈದಾನದಲ್ಲಿರುತ್ತಾರೆ. ಈ ಒತ್ತಡದಿಂದಾಗಿ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯಲ್ಲಿ ಏರುಪೇರಾಗುವುದು ಸಹಜ. ಆದರೂ ಆ ಒತ್ತಡ ನಿಭಾಯಿಸಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವ ನಿಮ್ಮ ಗುಣ ಅಭಿನಂದನೀಯ. ಬದಲಾದ ಕಾಲಕ್ಕೆ ತಕ್ಕಂತೆ ಅಪರಾಧಗಳ ಸ್ವರೂಪವೂ ಬದಲಾಗಿದ್ದು, ಇಲಾಖೆಯ ಮೇಲೆ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು.

 

ಬಲಿಷ್ಠ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದಾಗ ಮಾತ್ರ ಕಟ್ಟಕಡೆಯ ವ್ಯಕ್ತಿಗೂ ಅವರ ಸೇವೆಗೆ ತಕ್ಕ ಗೌರವ ಸಿಗಲು ಸಾಧ್ಯ. ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 650 ಜನ ನಿವೃತ್ತ  ಪೊಲೀಸ್   ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದಾರೆ. ನಿವೃತ್ತ ಪೊಲೀಸ್ ಸಬ್ ಬಸವರಾಜ್ ಅವರಿಗೆ ಸಿಕ್ಕಂತೆ ಪ್ರತಿಯೊಬ್ಬ ನಿವೃತ್ತ ಸಿಬ್ಬಂದಿಗೂ ಇಲಾಖೆಯ ವತಿಯಿಂದ ಸೂಕ್ತ ಗೌರವ ಮತ್ತು ವೇದಿಕೆ ಲಭಿಸುವಂತಾಗಲಿ ಎಂದು ಆಶಿಸಿದರು.

 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ,  ಪೊಲೀಸ್   ಸಿಬ್ಬಂದಿಗಳ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಇಲಾಖೆ ವಿಶೇಷ ಕಾಳಜಿ ವಹಿಸಿದ್ದು, 2025-26ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಒಟ್ಟು 89 ಮಕ್ಕಳಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ರೂ.28 ಲಕ್ಷ  ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

 

ಜಿಲ್ಲೆಯ 650 ನಿವೃತ್ತ ಸಿಬ್ಬಂದಿಗಳು ಆರೋಗ್ಯ ಭಾಗ್ಯ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆಯುತ್ತಿದ್ದಾರೆ. ಮೃತಪಟ್ಟ ಆರು ಮಂದಿ ಸಿಬ್ಬಂದಿ ಹಾಗೂ 12 ಮಂದಿ ನಿವೃತ್ತ ಸಿಬ್ಬಂದಿಗಳ ಕುಟುಂಬಕ್ಕೆ ಅಂತ್ಯಸಂಸ್ಕಾರಕ್ಕಾಗಿ ಒಟ್ಟು 2.10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

 

ಡಿಆರ್ ಕೇಂದ್ರ ಸ್ಥಾನದಲ್ಲಿರುವ  ಪೊಲೀಸ್   ಕ್ಯಾಂಟೀನ್ ಮೂಲಕ ಜಿಲ್ಲೆಯ 1,568 ಸಿಬ್ಬಂದಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಇದಲ್ಲದೆ ಮೆಡಿಕಲ್ ಮತ್ತು ಜನರಲ್ ಸ್ಟೋರ್‍ಗಳಲ್ಲಿ ರಿಯಾಯಿತಿ ದರದಲ್ಲಿ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ.  ಪೊಲೀಸ್   ಸಮುದಾಯ ಭವನದಲ್ಲಿ ಸಿಬ್ಬಂದಿಗಳ ಮಕ್ಕಳ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗುತ್ತಿದೆ.  ಪೊಲೀಸರು ಸಾರ್ವಜನಿಕ ಸೇವೆಯಲ್ಲಿ ನಿಷ್ಠೆಯಿಂದ ತೊಡಗಿಸಿಕೊಳ್ಳುವ ಜೊತೆಗೆ ಜನಸ್ನೇಹಿಯಾಗಿ ವರ್ತಿಸುವುದು ಇಂದಿನ ಅಗತ್ಯವಾಗಿದೆ ಎಂದರು.

 

ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಅಂಗವಾಗಿ ಪರೇಡ್ ಕಮಾಂಡರ್ ಡಿಎಆರ್ ಆರ್‍ಪಿಐ ಜಿ.ಶಶಿಕುಮಾರ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಐಮಂಗಲ ತರಬೇತಿ ಶಾಲೆಯ ಪ್ರಾಂಶುಪಾಲ ಪಾಪಣ್ಣ ಸೇರಿದಂತೆ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...