ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 17 : ಭಾರತೀಯ ಜನತಾ ಪಾರ್ಟಿ ನಗರ ಘಟಕದವತಿಯಿಂದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದು ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿ ಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಆವರಣದಲ್ಲಿ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮ ನೆರವೇರಿಸ ಲಾಯಿತು. ಜನ್ಮದಿನದ ಅಂಗವಾಗಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿತು.
ದೇಶದ ಅಭಿವೃದ್ಧಿ, ಜನಕಲ್ಯಾಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಗಳ ಕುರಿತು ಮಾತನಾಡಿದ ಸಂಸದರಾದ ಗೋವಿಂದ ಕಾರಜೋಳ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಪ್ರಧಾನಿಯವರ ಸುದೀರ್ಘ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಪುರಸ್ಕರಿಸುವ ಉದ್ದೇಶದಿಂದ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ನರೇಂದ್ರ ಮೋದಿ ಅವರು ಕಳೆದ 25 ವರ್ಷಗಳಿಂದ ಸಂವಿಧಾನಾತ್ಮಕ ಹುದ್ದೆಗಳಲ್ಲಿ ಯಾವುದೇ ಕಳಂಕವಿಲ್ಲದೆ, ನಿಸ್ವಾರ್ಥ ಸೇವೆಯೊಂದಿಗೆ ಆಡಳಿತ ನಡೆಸಿಕೊಂಡು ಬಂದಿದ್ದಾರೆ.ಪ್ರಧಾನಿಯಾಗಿ ಅವರ 12 ವರ್ಷಗಳ ಆಡಳಿತ ಅವಧಿಯಲ್ಲಿ 200ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇವುಗಳ ಮೂಲಕ ದೀನದಲಿತರು, ಬಡವರು, ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳು, ಪೌರಕಾರ್ಮಿಕರು ಹಾಗೂ ಸಮಾಜದ ಶೋಷಿತ ವರ್ಗದವರ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ.
ಶಿಕ್ಷಣ ಮತ್ತು ವೈದ್ಯಕೀಯ ಕ್ರಾಂತಿ: ಶಿಕ್ಷಣ ಕ್ಷೇತ್ರದಲ್ಲಿ ಹೊಸ ಐಐಟಿ ಮತ್ತು ಏಮ್ಸ್ ಸಂಸ್ಥೆಗಳನ್ನು ಪ್ರಾರಂಭಿಸುವ ಮೂಲಕ ತಾಂತ್ರಿಕ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ದೊಡ್ಡ ಕ್ರಾಂತಿಯನ್ನೇ ತರಲಾಗಿದೆ. ಕರ್ನಾಟಕದಲ್ಲಿ ದೀನದಲಿತರ ಮಕ್ಕಳಿಗೆ ಉಚಿತವಾಗಿ 6,000ಕ್ಕೂ ಹೆಚ್ಚು ಎಂಜಿನಿಯರಿಂಗ್ ಸೀಟುಗಳು ಲಭಿಸುವಂತೆ ಮಾಡಲಾಗಿದೆ. ಜೊತೆಗೆ 600ಕ್ಕೂ ಹೆಚ್ಚು ವೈದ್ಯಕೀಯ (ಮೆಡಿಕಲ್) ಹಾಗೂ ಸ್ನಾತಕೋತ್ತರ ಸೀಟುಗಳ ಸಂಖ್ಯೆ ಹೆಚ್ಚಾಗಿದ್ದು, ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಿದೆ. ಹಿಂದೆ ವಿಶ್ವದ ಶ್ರೀಮಂತ ದೇಶಗಳ ಪಟ್ಟಿಯಲ್ಲಿ 13ನೇ ಸ್ಥಾನದಲ್ಲಿದ್ದ ಭಾರತವನ್ನು, ಸ್ವಚ್ಛ ಹಾಗೂ ದಕ್ಷ ಆಡಳಿತದ ಮೂಲಕ 4ನೇ ಸ್ಥಾನಕ್ಕೇರಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ.ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ಪ್ರಧಾನಿ ಮೋದಿ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ದೀಪಾವಳಿ ಹಬ್ಬದಂತೆ ದೀಪ ಬೆಳಗಿಸುವ ಮೂಲಕ ಪ್ರಧಾನಿಯವರಿಗೆ ಆಶೀರ್ವಾದ ನೀಡಬೇಕೆಂದು ದೇಶದ 140 ಕೋಟಿ ಜನರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಶ್ರೀಮತಿ ರೇಖಾ, ಮಾಧುರಿ ಗೀರೀಶ್, ಡಾ.ಸಿದ್ದಾರ್ಥ ಗುಂಡಾರ್ಪಿ, ಲೋಕೇಶ್, ಪರಶುರಾಮ್,ಸಂಪತ್ ಕುಮಾರ್ ನಾಗರಾಜ್, ಬಸಮ್ಮ, ಭಾರ್ಗವಿ ದ್ರಾವಿಡ್, ಮುರಾರ್ಜಿ, ಚಂದ್ರು ಸೇರಿದಂತೆ ಇತರರು ಭಾಗವಹಿಸಿದ್ದರು.










