ಬೆಂಗಳೂರು.ಆಗಸ್ಟ್.2: ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ನೀರಿನ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಮಾತುಕತೆಗೆ ಬರಲು ಸಿದ್ಧ ಎಂದು ತಿಳಿಸಿದ್ದರು. ಆದರೆ, ಕಾವೇರಿ ಪರಿಸ್ಥಿತಿ ತಿಳಿಯಾದ ನಂತರ ಬರುವಂತೆ ಹೇಳಿದೆ. ಈಗ ಸಮಾಧಾನಕರ ಸಂಗತಿ ಎಂದರೆ ರಾಜ್ಯದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡು ಬರುತ್ತಿವೆ ಎಂದರು.
ನದಿ ನೀರಿನ ಹಂಚಿಕೆ ವಿಚಾರದಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳುವುದೇ ನಮ್ಮ ಆದ್ಯತೆಯಾಗಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಪ್ರಮಾಣದ ನೀರನ್ನು ಸಂಗ್ರಹಿಸಿಟ್ಟಿದ್ದೇವೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ಒಳಹರಿವನ್ನು ಸಂಗ್ರಹಿಸಿಡಲು ಸಾಧ್ಯವಾಗದ ಕಾರಣ ಸಹಜ ಹರಿವು ಮುಂದುವರಿದಿದೆ. ಈಗಾಗಲೇ ನಾಲೆಗಳಿಗೆ ನೀರು ಹರಿಸಲಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ಹೇಳಿದರು.
ಪ್ರಧಾನಮಂತ್ರಿ ಅವರು ಬರ ಕುರಿತಾಗಿ ಮುಂಚಿತವಾಗಿಯೇ ಎಚ್ಚರಿಕೆ ನೀಡಿದ್ದರು. ಅದರ ಆಧಾರದ ಮೇಲೆ ನಾನು ರೈತರಿಗೆ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದ್ದೆ ಎಂದು ತಿಳಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಎಲ್ಲರಿಗೂ ಸಂಪೂರ್ಣ ಅರಿವಿದೆ. ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದನ್ನು ಪರಿಗಣಿಸದೆ ತಮಿಳುನಾಡು 9.9 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕೂಡ ಸೂಚನೆ ನೀಡಿತ್ತು. ಆದರೆ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ನಾವು ಅದರ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಿದ್ದೇವೆ ಎಂದರು.
ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರು ಪ್ರತಿಯೊಂದು ಹಂತದಲ್ಲೂ ರಾಜ್ಯಕ್ಕೆ ಉತ್ತಮ ಸಹಕಾರ ನೀಡುತ್ತಾ ಬಂದಿದ್ದಾರೆ. ಕೃಷ್ಣಾ ನದಿ ನೀರಿನ ಹಂಚಿಕೆ, ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್ ಗೇಟ್ಗಳ ಮರುಸ್ಥಾಪನೆ, ನವಿಲೆ ಸಮತೋಲನ ಅಣೆಕಟ್ಟೆ ನಿರ್ಮಾಣದ ಪ್ರಸ್ತಾಪಕ್ಕೂ ಸಮ್ಮತಿ ಸೂಚಿಸಿದ್ದಾರೆ. ಕೃಷ್ಣಾ–ಗೋದಾವರಿ–ಕಾವೇರಿ ನದಿಗಳ ಜೋಡಣೆ ಹಾಗೂ ಕೃಷ್ಣಾ ನದಿ ನೀರು ಹಂಚಿಕೆಯಲ್ಲೂ ನೆರವು ನೀಡಿದ್ದಾರೆ ಎಂದು ಹೇಳಿದ್ದಾರೆ.

ವರುಣನ ಕೃಪೆಯಿಂದ ಕೊಡಗಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ನಮ್ಮಲ್ಲಿ 57 ಟಿಎಂಸಿ ಲಭ್ಯವಿದ್ದು, ನೀರಿನ ಒಳ ಹರಿವು ಹೆಚ್ಚಾಗಿದೆ. ನಿತ್ಯ 3500 ಕ್ಯೂಸೆಕ್ ಕಾವೇರಿ ಬಿಡಲು ಆದೇಶವಾಗಿದ್ದು, ಈಗಾಗಲೇ ನೀರಿನ ಒಳ ಹರಿವು ಹೆಚ್ಚಾಗಿರುವ ಕಾರಣ ಅಣೆಕಟ್ಟು ತುಂಬಿ ನೀರು ಹರಿದು ಹೋಗುತ್ತಿದೆ. ನೀರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದರು.
ರಾಜ್ಯದ ಕುಡಿಯುವ ನೀರಿನ ಅಗತ್ಯವನ್ನು ಭದ್ರಪಡಿಸುವುದರ ಜೊತೆಗೆ ರೈತರ ಹಿತವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ರೈತರು ಬಿತ್ತಿರುವ ಬೆಳೆಗಳ ರಕ್ಷಣೆಯ ಉದ್ದೇಶದಿಂದ ಕೆ.ಆರ್.ಎಸ್. ಹಾಗೂ ಕಬಿನಿ ನಾಲೆಗಳಿಗೆ ನೀರು ಹರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











