ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ದುಡಿಯುವ ವರ್ಗದ ಶ್ರಮಕ್ಕೆ ತಕ್ಕ ಪ್ರತಿಫಲ ಕೊಡದ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಧಿಕ್ಕರಿಸಿ ಜು.9 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನರೇಂದ್ರಮೋದಿ ದೇಶದ ಪ್ರಧಾನಿಯಾಗಿ ಹನ್ನೊಂದು ವರ್ಷಗಳು ಕಳೆದಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟು ಯುವ ಜನಾಂಗವನ್ನು ವಂಚಿಸಿದ್ದಾರೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಎಲ್ಲರೂ ಒಂದಲ್ಲ ಒಂದು ರೀತಿ ತೊಂದರೆ ಅನುಭವಿಸುವಂತಾಗಿದೆ. ವಿಶ್ವವಿದ್ಯಾನಿಲಯ, ಆಸ್ಪತ್ರೆಗಳಲ್ಲಿ ನೇರ ನೇಮಕಾತಿಯಿಲ್ಲ. ಹೊರ ಗುತ್ತಿಗೆ ಮೇಲೆ ಕೆಲಸಕ್ಕೆ ತೆಗೆದುಕೊಳ್ಳುತ್ತಿರುವುದರಿಂದ ಜೀವನ ಭದ್ರತೆಯಿಲ್ಲದಂತಾಗಿದೆ. ನರೇಗಾ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಕೂಲಿ ಕೆಲಸವೂ ಸಿಗದಂತ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಜೀವನ ಭದ್ರತೆಯಿಲ್ಲದೆ ನರಳುವಂತಾಗಿದೆ. ದುಡಿಯುವ ವರ್ಗ ಶೋಷಣೆಗೊಳಗಾಗಿರುವುದನ್ನು ಖಂಡಿಸಿ ದೇಶಾದ್ಯಂತ ಜು.9 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತರು, ಕಾರ್ಮಿಕರು ವಿವಿಧ ಸಂಘಟನೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡಿ ಕೇಂದ್ರದಲ್ಲಿ ಬಿಜೆಪಿ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾರ್ಮಿಕರು, ರೈತ ವಿರೋಧಿ ಕಾಯಿದೆಗಳನ್ನು ಜಾರಿಗೆ ತಂದು ಗಧಾಪ್ರಹಾರ ಮಾಡುತ್ತಿರುವುದರ ವಿರುದ್ದ ಜು.9 ರಂದು ಬೆಳಿಗ್ಗೆ 11 ಕ್ಕೆ ಯೂನಿಯನ್ ಪಾರ್ಕ್ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಮಹಿಳೆಯರು, ವಿವಿಧ ಸಂಘಟನೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು.
ಸಿ.ಕೆ.ಗೌಸ್ಪೀರ್ ಮಾತನಾಡುತ್ತ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗೆ ರಾಜ್ಯ ಸರ್ಕಾರ ಬೆಂಬಲಿಸುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಆಗುತ್ತಿಲ್ಲ. ಕೃಷಿ ಜಮೀನುಗಳು ಕಾರ್ಪೊರೇಟ್ ಕಂಪನಿಗಳ ಪಾಲಾಗುತ್ತಿವೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಮಾತನಾಡಿ ಕೇಂದ್ರ ಸರ್ಕಾರ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದಿಲ್ಲ. ಮಳೆಗಾಲ ಆರಂಭವಾಗಿದ್ದು, ಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದಾರೆ. ರೈತರ ಭೂಮಿಯನ್ನ ಸರ್ಕಾರ ಬಲವಂತವಾಗಿ ಕಸಿದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಸುವ ಮೂಲಕ ರೈತರನ್ನು ಶೋಷಣೆ ಮಾಡುತ್ತಿದೆ ಎಂದು ಆಪಾದಿಸಿದರು.
ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ, ಟಿ.ಆರ್.ಉಮಾಪತಿ, ಕಾಂ.ಬಿ.ಬಸವರಾಜ್, ಜಯದೇವಮೂರ್ತಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
















