ಸುದ್ದಿಒನ್, ದಾವಣಗೆರೆ, ಜೂನ್. 19: ವಿಧಾನ ಪರಿಷತ್ ಚುನಾವಣೆಯಲ್ಲಿ ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಅವರು ಭರ್ಜರಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ಕೆ. ಬಿ. ಬಡಾವಣೆಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಕಾರ್ಯಕರ್ತರು ಭರ್ಜರಿ ವಿಜಯೋತ್ಸವ ಆಚರಿಸಿದರು. ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಯಘೋಷಗಳೊಂದಿಗೆ ಸಂಭ್ರಮಿಸಿದರು.
ಸಾಮಾನ್ಯ ಕಾರ್ಯಕರ್ತರಿಗೆ ಮನ್ನಣೆ ನೀಡಿದ ಬಿಜೆಪಿ: ರಾಜನಹಳ್ಳಿ ಶಿವಕುಮಾರ್
ವಿಜಯೋತ್ಸವದ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿಯು ಸಾಮಾನ್ಯ ಅಭ್ಯರ್ಥಿಗಳಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸುವ ಮೂಲಕ ಕಾರ್ಯಕರ್ತರಿಗೆ ಗೌರವ ತಂದಿಟ್ಟಿದೆ. ನೂತನವಾಗಿ ಆಯ್ಕೆಯಾಗಿರುವ ಇಬ್ಬರೂ ನಾಯಕರು ಅಭಿನಂದಾರ್ಹರು ಎಂದರು.
ಕೇವಲ ಹಣವಿದ್ದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ನೀಡುವ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದೇ ಬಿಜೆಪಿ. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದವರಿಗೆ ಹೈಕಮಾಂಡ್ ಮನ್ನಣೆ ನೀಡುತ್ತದೆ. ದೇಶದ ಬೇರೆ ಯಾವ ಪಕ್ಷಗಳಲ್ಲಿಯೂ ಇಂತಹ ಸಂಪ್ರದಾಯ ಇಲ್ಲ. ಹಾಗಾಗಿಯೇ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂದರು.
ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲಿದ್ದಾರೆ :
ರಘು ಕೌಟಿಲ್ಯ ಹಾಗೂ ಲಿಂಗರಾಜ್ ಪಾಟೀಲ್ ಅವರು ಪಕ್ಷದ ಸಂಘಟನೆಗೆ ಅವಿರತ ಶ್ರಮ ವಹಿಸಿದ್ದಾರೆ ಮತ್ತು ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರ ಪಕ್ಷ ನಿಷ್ಠೆ ಹಾಗೂ ಸಂಘಟನಾ ಚಾತುರ್ಯವನ್ನು ಪರಿಗಣಿಸಿ ಟಿಕೆಟ್ ನೀಡಲಾಗಿತ್ತು. ಗೆದ್ದು ಬಂದಿರುವ ಈ ಇಬ್ಬರೂ ಅಭ್ಯರ್ಥಿಗಳು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಅಕ್ರಮ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಸದನದಲ್ಲಿ ಸಮರ್ಥವಾಗಿ ಧ್ವನಿ ಎತ್ತಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಪ್ರಮುಖರು
ಈ ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಮಹೇಂದ್ರ ಹೆಬ್ಬಾಳ್, ಅಣಜಿ ಗುಡ್ಡೇಶ್, ಕಿರೀಟ ಸಿ ಕಲಾಲ್, ನಿಂಗರಾಜ್ ಹಾವನೂರ, ಡೈಮಂಡ್, ಮಂಜಣ್ಣಾ, ಸುರೇಂದ್ರ ಮೊಯ್ಲಿ, ಮಂಜುನಾಥ್ ಗುತುರು, ಕಿಶೋರ್ ಕುಮಾರ್, ಶಿವಾನಂದ, ಬಾಲರಾಜ್ ಶ್ರೇಷ್ಠಿ, ರಾಮಚಂದ್ರ, ನವೀನ್ ಕುಮಾರ್ ಹೆಚ್. ಬಿ., ದುಗ್ಗೇಶ್, ಏಕಾಂತಪ್ಪ, ಸಾಂಬಾಜಿರಾವ್ ಸೇರಿದಂತೆ ಹಲವು ಪ್ರಮುಖರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.










