ಸುದ್ದಿಒನ್,ರಾಯಚೂರು,ಮೇ.24: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರನ್ನು ತೀವ್ರ ಆತಂಕಕ್ಕೆ ತಳ್ಳಿರುವ ಸರಣಿ ಹೃದಯಾಘಾತದ ಕರಾಳ ಹಸ್ತಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಹಠಾತ್ ಎದೆನೋವಿನಿಂದ ಕೊನೆಯುಸಿರೆಳೆದ ಕರುಣಾಜನಕ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಸಂಭವಿಸಿದೆ. ಚಿಂಚೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾದ 51 ವರ್ಷದ ನಾಗಪ್ಪ ಎಂಬುವವರೇ ಈ ದುರಂತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೃತ ನಾಗಪ್ಪ ಅವರು ಎಂದಿನಂತೆ ಅಖಾಡಕ್ಕಿಳಿದು ನೆರೆಗಾ ಯೋಜನೆಯಡಿ ಗಿಡಗಂಟಿಗಳನ್ನು ತೆರವುಗೊಳಿಸುವ ಕಾಯಕದಲ್ಲಿ ಅತ್ಯಂತ ಉತ್ಸಾಹದಿಂದ ನಿರತರಾಗಿದ್ದರು. ಆದರೆ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ದಿಢೀರನೆ ಅವರಿಗೆ ತೀವ್ರ ಸ್ವರೂಪದ ಎದೆನೋವು ಕಾಣಿಸಿಕೊಂಡಿದ್ದು, ನೋವಿನ ತೀವ್ರತೆ ತಡೆಯಲಾರದೆ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ. ಇದನ್ನು ಕಂಡು ತಲ್ಲಣಗೊಂಡ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಮಾರ್ಗಮಧ್ಯದಲ್ಲೇ ನಾಗಪ್ಪ ಅವರ ಪ್ರಾಣಪಕ್ಷಿ ಹಾರಿದೆ.

ವಯಸ್ಸಿನ ಭೇದವಿಲ್ಲದೆ, ಯಾವುದೇ ಮುನ್ಸೂಚನೆ ನೀಡದೆ ಅಪ್ಪಳಿಸುತ್ತಿರುವ ಇಂತಹ ಹಠಾತ್ ಸಾವುಗಳು ಸಾರ್ವಜನಿಕರಲ್ಲಿ ಭೀತಿಯನ್ನು ಹೆಚ್ಚಿಸಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಸ್ಥಿತಿಗತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗಂಭೀರವಾಗಿ ಯೋಚಿಸುವಂತೆ ಮಾಡಿದೆ.










