ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ರಾಜ್ಯಾದ್ಯಂತ ಬಾರಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮಳೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸುತ್ತಿವೆ. ಇನ್ನು ರಾಜ್ಯ ರಾಜಧಾನಿಯ ಹಲವು ಪ್ರದೇಶಗಳ ಸ್ಥಿತಿ ಪ್ರವಾಹವನ್ನು ಅನುಭವಿಸಿದಂತಾಗುತ್ತಿದೆ. ಮುಂದಿನ ಎರಡು ದಿನ ಇನ್ನು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು, ನಾಳೆ ಬೆಳಗ್ಗೆ ತನಕ ಮಳೆ ಇರಲಿದೆ ಎಂದು ಸೂಚನೆ ನೀಡಿದ್ದಾರೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆ ಹೆಚ್ಚಿನ ಪ್ರಮಾಣದಲ್ಲಿ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ನಿನ್ನೆ ಕೂಡ ರಾಜ್ಯಾದ್ಯಂತ ಭಾರೀ ಮಳೆಯಾಗಿತ್ತು. ಇನ್ನು ಎರಡು ದಿನ ಮಳೆ ಮುಂದುವರೆಯಲಿದ್ದು, ಮನೆಯಿಂದ ಹೊರಡುವಾಗಲೇ ಛತ್ರಿ ಸೇರಿದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ.