ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ನಿಲ್ಲುತ್ತಿಲ್ಲ. ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ದಿನೇ ದಿನೇ ಹಲವು ಕಡೆಗಳಲ್ಲಿ ಮಣ್ಣು ಕುಸಿತದ ಪ್ರಕರಣಗಳು ನಡೆಯುತ್ತಿವೆ. ಇದರಿಂದ ರಸ್ತೆ ಸಂಪರ್ಕಗಳು ಕಡಿತಗೊಳ್ಳುತ್ತಿವೆ. ಮುಂದಿನ ಎರಡು ದಿನ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಜೂನ್ 31ರವರೆಗೂ ರಾಜ್ಯದಲ್ಲಿ ಬಾರೀ ಮಳೆಯಾಗಲಿದೆ. ಅದರಲ್ಲೂ ಮುಂದಿನ ಎರಡು ದಿನಗಳ ಕಾಲ ಕರಾವಳಿ, ಉಡುಪಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಜೋರು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದ್ದು ಮೀನುಗಾರರು ನದಿಗೆ ಇಳಿಯದಂತೆ ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಗುಡ್ಡ ಕುಸಿತದಿಂದಾನೇ ಸಾಕಷ್ಟು ಸಾವು ನೋವು ಸಂಭವಿಸಿದೆ. ಹೀಗಿರುವಾಗ ಮತ್ತೆ ಮಳೆ, ಗಾಳಿ ಮುಂದುವರೆದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಗಾಳಿಯ ವೇಗವು 30-40 ಕಿಲೋ ಮೀಟರ್ ತಲುಪುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಬೆಳಗ್ಗೆಯಿಂದಾನೆ ತಂಡಿ ಇದ್ದು, ಮೋಡ ಕವಿದ ವಾತಾವರಣವಿದೆ. ಹೀಗಾಗಿ ಸಂಜೆ ವೇಳೆಗೆ ಜೋರು ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಹಾಸನದ ಸಕಲೇಶಪುರದಲ್ಲಿ ರಸ್ತೆಯೇ ಕುಸಿದು ಆತಂಕ ಸೃಷ್ಟಿಸಿದೆ. ಸಕಲೇಶಪುರದ ಹಲವೆಡೆ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಸ್ತೆಗಳು ಕೊಚ್ಚಿ ಹೋಗಿ, ಜನರ ಓಡಾಟಕ್ಕೆ ತೊಂದರೆಯಾಗಿದೆ. ಇನ್ನು ಕೆಲವೆಡೆ ಶಾಲಾ ಕಾಲೇಜಿಗೆ ರಜೆ ಕೂಡ ನೀಡಿಲ್ಲ. ಮಳೆಯ ನೀರಿನಲ್ಲಿಯೇ ನೆನೆದುಕೊಂಡು ಶಾಲೆಗೆ ಮಕ್ಕಳು ಹೋಗುತ್ತಿದ್ದಾರೆ.


















