ಸುದ್ದಿಒನ್, ಚಿತ್ರದುರ್ಗ, ಮೇ.18: ಕಡು ಬೇಸಿಗೆಯ ಬಿಸಿಲಿಗೆ ಕಾದ ಹೆಂಚಿನಂತಾಗಿದ್ದ ಕೋಟೆ ನಾಡಿನ ಭೂಮಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದು ರಾತ್ರಿ ಸುಮಾರು 8:15ರ ವೇಳೆಗೆ ಆರಂಭವಾದ ಮಳೆ, ಯಾವುದೇ ಆರ್ಭಟವಿಲ್ಲದೆ ಹದವಾಗಿ ಸುರಿದು ಜನರಲ್ಲಿ ಸಂತಸ ಮೂಡಿಸಿದೆ.
ಮೊದಲಿಗೆ ಸ್ವಲ್ಪ ಗುಡುಗು ಮತ್ತು ಮಿಂಚಿನೊಂದಿಗೆ ಆರಂಭವಾದ ಮಳೆ, ಅರ್ಧ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸತತವಾಗಿ ಸುರಿಯಿತು. ಇದರಿಂದಾಗಿ ನಗರದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು ರಾತ್ರಿ ಉತ್ತಮ ಮಳೆಯಾಗಿದೆ. ಅಡಿಕೆ ತೋಟದವರು ಈ ಬೇಸಿಗೆಯಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದರು. ಈ ಮಳೆಯಿಂದ ನಿಟ್ಟುಸಿರು ಬಿಡುವಂತಾಗಿದೆ.

ಹಲವು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ :
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ವಿಶೇಷವಾಗಿ ಕೊಪ್ಪಳ, ಧಾರವಾಡ, ಗದಗ್, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗಗಳಲ್ಲಿ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ.
ಬೆಂಗಳೂರು ಸೇರಿ ವಿವಿಧೆಡೆ ‘ಯೆಲ್ಲೋ ಅಲರ್ಟ್’
ಚಿತ್ರದುರ್ಗ, ಬೆಳಗಾವಿ, ಮೈಸೂರು, ಮಂಗಳೂರು, ಉಡುಪಿ ಹಾಗೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಮೇ 21ರವರೆಗೆ ಮಳೆಯ ಅಬ್ಬರ:
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 21ರವರೆಗೆ ಮಳೆಯ ಅಬ್ಬರ ಜೋರಾಗಿರಲಿದ್ದು, ಆ ಬಳಿಕ ವಾತಾವರಣ ತಿಳಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ, ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ pic.twitter.com/sXowMnsNhd
— Karnataka State Natural Disaster Monitoring Centre (@KarnatakaSNDMC) May 18, 2026
















