ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರವಾದ ರಂಜಾನ್ ಹಬ್ಬವನ್ನು ಶನಿವಾರ ಶ್ರದ್ದಾ ಭಕ್ತಿಯಿಂದ ಆಚರಿಸಿದರು.
ದಾವಣಗೆರೆ ರಸ್ತೆಯಲ್ಲಿರುವ ಎ.ಪಿ.ಎಂ.ಸಿ. ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ಎಂಟು ಗಂಟೆಗೆ ಪ್ರಾರ್ಥನೆ ಆರಂಭಗೊಂಡಿತು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರತನಕ ಸಡಗರ ಸಂಭ್ರಮದಿಂದ ಪ್ರಾರ್ಥನೆಯಲ್ಲಿ ತೊಡಗಿದ್ದರು. ಮನೆಯಿಂದಲೆ ಕೆಲವರು ಚಾಪೆ, ಬೆಡ್ಶೀಟ್, ಜಮಖಾನಗಳನ್ನು ತೆಗೆದುಕೊಂಡು ಹೋಗಿ ಮೈದಾನದಲ್ಲಿ ಹಾಸಿಕೊಂಡು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ದಾವಣಗೆರೆ ರಸ್ತೆಯ ಆಜಾದ್ಮಿಲ್ ಸಮೀಪ ರಸ್ತೆಯ ಎರಡು ಕಡೆ ಪೊಲೀಸ್ ಬ್ಯಾರಿಕೇಡ್ಗಳನ್ನಿಟ್ಟು ವಾಹನಗಳ ಸಂಚಾರವನ್ನು ನಿಯಂತ್ರಿಸಲಾಯಿತು. ಬಿಸಿಲ ತಾಪ ಜಾಸ್ತಿಯಿದ್ದುದರಿಂದ ಬಹುತೇಕರು ತಲೆಯ ಮೇಲೆ ಟೋಪಿಗಳನ್ನು ಧರಿಸಿದ್ದರೆ ಇನ್ನು ಕೆಲವರು ಕರವಸ್ತ್ರಗಳನ್ನು ಸುತ್ತಿಕೊಂಡು ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆಯ ನಂತರ ಪರಸ್ಪರ ಅಪ್ಪುಗೆಯ ಮೂಲಕ ರಂಜಾನ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ, ಜಿಲ್ಲಾ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಎಂ.ಸಿ.ಓ.ಬಾಬು, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಎ.ಜಾಕೀರ್ಹುಸೇನ್, ಮೊಹಮದ್ ಸೈಫುಲ್ಲಾ, ಸೈಯದ್ ತಬ್ರೇಜ್ ಆಶ್ಮಿ ಸೇರಿದಂತೆ ಮುಸ್ಲಿಂ ಸಮಾಜದ ಅನೇಕ ಮುಖಂಡರುಗಳು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಚೇಳುಗುಡ್ಡದ ಕೊಹಿನೂರ್ ಈದ್ಗಾ, ಚಂದ್ರವಳ್ಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.
















