ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಆಯ್ಕೆಯನ್ನ ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಆ ಆದೇಶವನ್ನು ತಡೆಹಿಡಿದಿದೆ. ಇದರಿಂದ ಸುಬ್ಬಾರೆಡ್ಡಿಗೆ ರಿಲೀಫ್ ಸಿಕ್ಕಂತಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಟಿ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ, ಸುಬ್ಬಾರೆಡ್ಡಿ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಪ್ರತಿವಾದಿಯವರಿಗೆ ನೋಟೀಸ್ ಜಾರಿ ಮಾಡಿದ್ದು, ಮಧ್ಯಂತರ ಆದೇಶವನ್ನು ನೀಡಿತ್ತು. ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್ ಅವರ ಪರವಾಗಿ ವಾದ ಮಂಡಿಸಿದರು. ಅರ್ಜಿದಾರ ಎಸ್ ಎಸ್ ಸುಬ್ಬಾರೆಡ್ಡಿ ಅವರನ್ನು ಎಲ್ಲಾ ಪ್ರಾಯೋಗಿಕ ಉದ್ದೇಶಗಳಿಗಾಗಿ ವಿಧಾನಸಭೆಯ ಸದಸ್ಯರೆಂದು ಪರಿಗಣಿಸಬರೆಕೆಂದು ಪೀಠವೂ ನಿರ್ದೇಶಿಸಿತ್ತು.
ಪ್ರತಿವಾದಿಯಾದ ಬಿಜೆಪಿಯ ಪ್ರತಿಸ್ಪರ್ಧಿ ಅಭ್ಯರ್ಥಿ ಸಿ.ಮುನಿರಾಜು ಅವರು ಚುನಾವಣೆಯಲ್ಲಿ ಎಸ್.ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಹೀಗಾವಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ್ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದ ಸುಬ್ಬಾರೆಡ್ಡಿ, ಚುನಾವಣೆ ತಕರಾರು ಅರ್ಜಿಯಲ್ಲಿ ಯಾವುದೆ ಹುರುಳಿಲ್ಲ. ಹೀಗಾಗಿ ಅದನ್ನು ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಪರ ವಿರೋಧ ವಾದ ಆಲಿಸಿದ್ದ ಹೈಕೋರ್ಟ್ ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿತ್ತು. ಹೀಗಿದ್ದರೂ ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಕೋರ್ಟ್ ಘೋಷಣೆ ಮಾಡಿರಲಿಲ್ಲ.



