ಮೈಸೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಕೋಗಿಲೆ, ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಶನಿವಾರ ಸಂಜೆ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಸಂಜೆ ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಕಣಿಯನಹುಂಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ.
ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನ ಪಡೆಯಲು ಭಾನುವಾರ ಬೆಳಿಗ್ಗೆ 8 ಗಂಟೆಯಿಂದಲೇ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್. ಜಾನಕಿ ಅವರ ಕೊನೆಯ ಇಚ್ಛೆಯಂತೆಯೇ ಈ ಎಲ್ಲ ಕಾರ್ಯಗಳು ಜರುಗುತ್ತಿರುವುದು ವಿಶೇಷ. ಮೊದಲು ನವೀನ್ ಫಾರಂ ಹೌಸ್ನಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ, ಆನಂತರ ಕಣಿಯನಹುಂಡಿಯಲ್ಲಿ ಸಾರ್ವಜನಿಕ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರಿ ಗೌರವಗಳೊಂದಿಗೆ 'ಗಾನ ಕೋಗಿಲೆ' ಅಂತ್ಯಸಂಸ್ಕಾರ
ಮೈಸೂರಿನಲ್ಲಿ ನಿಧನರಾಗಿರುವ ಗಾನ ಕೋಗಿಲೆ ಎಸ್. ಜಾನಕಿ ಅವರ ಕುಟುಂಬ ಸದಸ್ಯರಿಗೆ
ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು… https://t.co/Uki9KgQkMr
— CM of Karnataka (@CMofKarnataka) July 11, 2026
ಕೆಲವು ವರ್ಷಗಳ ಹಿಂದೆಯೇ ಜಾನಕಿ ಅವರ ಪುತ್ರ ಮುರಳಿಕೃಷ್ಣ ಅವರು ನಿಧನರಾಗಿದ್ದ ಹಿನ್ನೆಲೆಯಲ್ಲಿ, ಅವರ ಮೊಮ್ಮಗಳು ಅಪ್ಸರಾ ಅವರು ಅಂತಿಮ ಸಂಸ್ಕಾರದ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಸ್ವತಃ ದೂರವಾಣಿ ಕರೆ ಮಾಡಿ, ಗಾಯಕಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ ಹೇಳಲು ಸೂಚಿಸಿದ್ದು, ಕುಟುಂಬದ ಸದಸ್ಯರ ಒಪ್ಪಿಗೆಯ ಮೇರೆಗೆ ಮೈಸೂರಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.










