ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಸರೋಜಾ ದೇವಿ ಅವರ ತಾಯಿ ಹುಟ್ಟೂರು ದಶಾವರದಲ್ಲಿಯೇ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ. ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರು ಕೂಡ ಸರೋಜಾ ದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ್ದಾರೆ. ಇದೇ ವೇಳೆ ಸಕಲ ಸರ್ಕಾರಿ ಗೌರವಗಳನ್ನು ಒದಗಿಸಿಕೊಡುವುದಾಗಿಯೂ ತಿಳಿಸಿದ್ದಾರೆ. ಸರೋಜಾದೇವಿ ಅಗಲಿಕೆ ಚಿತ್ರರಂಗಕ್ಕೆ ನಷ್ಟವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಅಭಿನಯ ಸರಸ್ವತಿ ಎಂಬ ಬಿರುದು ಪಡೆದುಕೊಂಡವರು ಎಂದು ಸರೋಜಾ ದೇವಿ ಅವರ ಬಗ್ಗೆ ಮಾತನಾಡಿದ್ದಾರೆ.
ಏಳು ದಶಕಗಳ ಕಾಲ ಚಿತ್ರರಂಗದಲ್ಲಿದ್ದವರು ಸರೋಜಾ ದೇವಿ ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರೊಬ್ಬರು ಮೇರು ನಟಿ. ಕನ್ನಡ ಮಾತ್ರವಲ್ಲ ತಮಿಳು, ತೆಲುಗು, ಹಿಂದಿ ಭಾಷೆಯಲ್ಲೂ ಅಭಿನಯಿಸಿ ಸೈ ಎನಿಸಿಕೊಂಡವರು. ಅವರು ಮಾಡುತ್ತಿದ್ದ ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಕನ್ನಡ ಚಿತ್ರರಂಗ ಬೆಳೆಯುವುದಕ್ಕೆ ಅವರದ್ದೂ ಅಪಾರವಾದ ಕೊಡುಗೆ ಇದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಜಿಲ್ಲಾಡಳಿತದ ವತಿಯಿಂದ ಸಕಲ ಸರ್ಕಾರಿ ಗೌರವಗಳನ್ನ ಒದಗಿಸಲಾಗುತ್ತದೆ ಎಂದಿದ್ದಾರೆ. ಇನ್ನು ಈಗಾಗಲೇ ಸರೋಜಾ ದೇವಿ ಅವರ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ದಶಾವರಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಮಧ್ಯಾಹ್ನ1.30ರ ವೇಳೆಗೆ ಒಕ್ಕಲಿಗ ಸಮುದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ವಿದೇಶದಲ್ಲಿದ್ದ ಮಗಳು ಕೂಡ ಬಂದಿದ್ದು, ಚಿತ್ರರಂಗದ ಗಣ್ಯರೆಲ್ಲ ಸಂತಾಪ ಸೂಚಿಸಿದ್ದಾರೆ.















