ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಪದಾಧಿಕಾರಿಗಳು ಹಾಗೂ ನೈಜ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿ ಕೆಪಿಸಿಸಿ. ಮೂಲಕ ಎಐಸಿಸಿ.ಗೆ ಆಕಾಂಕ್ಷಿಗಳ ಹೆಸರುಗಳನ್ನು ರವಾನಿಸಲಾಗುವುದು. ಅಲ್ಲಿಯವರೆಗೂ ನೀವುಗಳು ಶಿಸ್ತಿನಿಂದ ವರ್ತಿಸಬೇಕು. ಕರ್ನಾಟಕದವರೆ ಆಗಿರುವ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ. ಅಧ್ಯಕ್ಷರಾಗಿರುವುದರಿಂದ ಈ ರಾಜ್ಯಕ್ಕೆ ತನ್ನದೆ ಆದ ಪ್ರತಿಷ್ಠಿಯಿದೆ. ಅದನ್ನು ಹಾಳು ಮಾಡುವುದು ಬೇಡ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ, ಮಾಜಿ ಸಂಸದ, ಜಿಲ್ಲಾ ವೀಕ್ಷಕರಾಗಿ ಆಗಮಿಸಿರುವ ರಿಪುನ್ ಬೊಹರಾ ಕಾರ್ಯಕರ್ತರುಗಳಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಘಟನ್ ಸೃಜನ್ ಅಭಿಯಾನ್ ಸಭೆಯನ್ನುದ್ದೇಶಿಸಿ ಮಾತನಾಡಿದರು. 2028 ರಲ್ಲಿ ನಡೆಯುವ ವಿಧಾನಸಭೆ ಹಾಗೂ 2029 ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ.ಯನ್ನು ಸಮರ್ಥವಾಗಿ ಎದುರಿಸುವ ಸಾಮಥ್ರ್ಯವಿರುವವರನ್ನು ಹುಡುಕಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗುವುದು. ಕೋಮುವಾದಿ ಬಿಜೆಪಿ.ಯವರು ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತ ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮವನ್ನು ವಿರೋಧಿಸಿ ದೆಹಲಿಯ ಜಂತರ್-ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ಗಾಂಧಿ, ಮಲ್ಲಿಕಾರ್ಜುನಖರ್ಗೆ, ಪ್ರಿಯಾಂಕಗಾಂಧಿ ಇವರುಗಳು ಬೆಂಬಲಿಸಿ ಹೋರಾಟಕ್ಕೆ ಇಳಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ ನಾಯಕರುಗಳಲ್ಲಿ ಅನೇಕರು ಬ್ರಿಟೀಷರ ಗುಂಡಿಗೆ ಎದೆಯೊಡ್ಡಿದ್ದಾರೆ. ಕಾಂಗ್ರೆಸ್ಗೆ ತ್ಯಾಗ ಬಲಿದಾನದ ಇತಿಹಾಸವಿದೆ. ಬೇರೆ ಯಾವ ಪಕ್ಷಕ್ಕೂ ಇಂತಹ ಇತಿಹಾಸವಿಲ್ಲ ಎನ್ನುವುದನ್ನು ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಅರ್ಥಮಾಡಿಕೊಳ್ಳಬೇಕೆಂದರು.

ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್.ಉಗ್ರಪ್ಪ ಮಾತನಾಡಿ ಕಾಂಗ್ರೆಸ್ ಎಂದರೆ ಶಿಸ್ತಿಗೆ ಹೆಸರುವಾಸಿಯಾದ ಪಕ್ಷ. ಶಿಸ್ತಿಲ್ಲದಿದ್ದರೆ ಪಕ್ಷವನ್ನು ಬೆಳೆಸಲು ಆಗಲ್ಲ. ಗೊಂದಲಗಳಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅರ್ಹ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ. ಕಾಂಗ್ರೆಸ್ ಕಟ್ಟಾಳುಗಳಿಗೆ ಬದ್ದತೆ, ಪ್ರಾಮಾಣಿಕತೆ, ಪಕ್ಷ ನಿಷ್ಠೆಯಿರಬೇಕು. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ. ಜೆಡಿಎಸ್.ಪಕ್ಷವನ್ನು ಎದುರಿಸಬೇಕಾಗಿರುವುದರಿಂದ ನೈಜ ಕಾರ್ಯಕರ್ತರು ಪದಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಹೈಕಮಾಂಡ್ಗೆ ಕಳಿಸಿದ ನಂತರ ಜಿಲ್ಲಾ ಕಾಂಗ್ರೆಸ್ಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದೆಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ನೀಡುವುದಾಗಿ ಕೇಂದ್ರ ಘೋಷಿಸಿರುವುದನ್ನು ಬಿಟ್ಟರೆ ಇದುವರೆವಿಗೂ ನಯಾ ಪೈಸೆಯನ್ನು ಕೊಟ್ಟಿಲ್ಲ. ಜಿಲ್ಲೆ ಬರಗಾಲಕ್ಕೆ ತುತ್ತಾಗಿದೆ. ಇಂತಹ ಅನೇಕ ಸಮಸ್ಯೆಗಳನ್ನು ಪಟ್ಟಿ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಸಾಮಾನ್ಯ, ಮಹಿಳೆ ಹೀಗೆ ಪ್ರತಿಯೊಬ್ಬರ ಮಾಹಿತಿಯನ್ನು ಕಲೆ ಹಾಕಿ ಹೆಸರುಗಳನ್ನು ವರಿಷ್ಟ ಮಂಡಳಿಗೆ ಶಿಫಾರಸ್ಸು ಮಾಡಲಾಗುವುದು. ಅರ್ಹರಿಗೆ ಚುನಾವಣೆಯಲ್ಲಿ ಟಿಕೇಟ್ ನೀಡಲಾಗುವುದೆಂದು ತಿಳಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಸೈಯದ್ ಅಹಮದ್ ಮಾತನಾಡುತ್ತ ಕಾರ್ಯಕರ್ತರು ಪದಾಧಿಕಾರಿಗಳೆ ಪಕ್ಷಕ್ಕೆ ನಿಜವಾದ ಶಕ್ತಿ. ನಿಮ್ಮ ಹೆಗಲ ಮೇಲೆ ಪಕ್ಷ ನಿಂತಿದೆ. ರಾಹುಲ್ಗಾಂಧಿಯವರ ಮಾರ್ಗಸೂಚಿಯಂತೆ ಜಿಲ್ಲಾ ಕಾಂಗ್ರೆಸ್ಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಘಟನ್ ಸೃಜನ್ ಅಭಿಯಾನ್ ಸಭೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಾಡಿದ್ದೇವೆ. ಅಸೆಂಬ್ಲಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕಾಗಿರುವುದರಿಂದ ನಿಮ್ಮಗಳ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದೇವೆ. ಇಲ್ಲಿ ಯಾರು ದೊಡ್ಡವರು ಯಾರು ಚಿಕ್ಕವರೂ ಅಲ್ಲ. ಎಲ್ಲರೂ ಸೇರಿದಾಗ ಮಾತ್ರ ಪಕ್ಷ ಎನ್ನುವುದನ್ನು ನೀವುಗಳು ಮರೆಯಬಾರದೆಂದು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಸೂಚಿಸಿದರು.
ನಿಮ್ಮ ವಿರುದ್ದ ನಾವುಗಳು ಬಂದಿಲ್ಲ. ನಿಮ್ಮ ಅಭಿಪ್ರಾಯ ಹೈಕಮಾಂಡ್ಗೆ ಹೋಗುತ್ತೆ. ಕಾಂಗ್ರೆಸ್ ಋಣ ನಿಮ್ಮ ಮೇಲಿದ್ದರೆ ಈ ಸಂದರ್ಭದಲ್ಲಿ ತೀರಿಸಿ. ನಿಮ್ಮ ಮನಸ್ಸಿನಲ್ಲಿರುವುದನ್ನು ತಿಳಿದುಕೊಳ್ಳಲು ಬಂದಿದ್ದೇವೆಂದರು. ಕೆಪಿಸಿಸಿ. ಪ್ರಧಾನ ಕಾರ್ಯದರ್ಶಿ ರಮೇಶ್ ಕುಮಾರ್ ಮಾತನಾಡಿ ಐದು ತಾಲ್ಲೂಕುಗಳಲ್ಲಿ ಸಭೆ ಮುಗಿಸಿ ಕೊನೆಯದಾಗಿ ಚಿತ್ರದುರ್ಗಕ್ಕೆ ಬಂದಿದ್ದೇವೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬರ ಅಭಿಪ್ರಾಯ ಪಡೆದು ಪಕ್ಷದ ವರಿಷ್ಟರಿಗೆ ಕಳಿಸುತ್ತೇವೆ. ಅನಿಸಿಕೆಗಳನ್ನು ತಿಳಿಸಲು ಎಲ್ಲರಿಗೂ ಅವಕಾಶವಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕಾಂಗ್ರೆಸ್ ಪಕ್ಷ ಗೆಲ್ಲಬೇಕು. ಪಾರ್ಲಿಮೆಂಟ್ ಚುನಾವಣೆಯಲ್ಲಿಯೂ ಪಕ್ಷ ಅಧಿಕಾರ ಹಿಡಿಯಬೇಕು. ದೆಹಲಿಯ ಜಂತರ್-ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಗಾಂಧಿ ಇವರುಗಳು ಬೆಂಬಲಸಿದ್ದರಿಂದ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ತಲೆದಂಡವಾಯಿತು. ಜಾತಿ ಬೇಧ ಮರೆತು ಕಾಂಗ್ರೆಸ್ ಗೆಲ್ಲಿಸಿ ರಾಹುಲ್ಗಾಂಧಿಯನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ಕಾರ್ಯಕರ್ತರುಗಳಲ್ಲಿ ವಿನಂತಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಶಾಸಕ ಎ.ವಿ.ಉಮಾಪತಿ ಇವರುಗಳು ವೇದಿಕೆಯಲ್ಲಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









