ಸುದ್ದಿಒನ್, ದಾವಣಗೆರೆ, ಏಪ್ರಿಲ್. 18 :
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ಮುಖಂಡರಾಗಿದ್ದ ಸೈಯದ್ ಸೈಫುಲ್ಲಾ ಸಾಬ್ಅವರು ಶನಿವಾರ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐದು ಪುತ್ರಿಯರು, ಪುತ್ರ ಸೈಯದ್ ಖಾಲಿದ್ ಅಹ್ಮದ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸೈಫುಲ್ಲಾ ಸಾಬ್ ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕಳೆದ 45 ವರ್ಷಗಳಿಂದ ಶಿಕ್ಷಣ, ಬ್ಯಾಂಕಿಂಗ್ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿ ವಿಶಿಷ್ಟ ಗುರುತು ಮೂಡಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಸಿದ್ದರಾಮಯ್ಯ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ ಸೇರಿದಂತೆ ಹಲವಾರು ಹಿರಿಯ ನಾಯಕರ ಆಪ್ತರಾಗಿದ್ದರು.
2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ವಿರುದ್ಧ ಸೋತರೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ನಂತರ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
ಶೈಕ್ಷಣಿಕವಾಗಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದ ಅವರು, ದಾವಣಗೆರೆಯ ಡಿಆರ್ಎಂ ಕಾಲೇಜಿನಲ್ಲಿ ಬಿ.ಎಡ್ ಅಭ್ಯಾಸ ಮಾಡಿ, ಎಂ.ಎಂ. ಬಸಪ್ಪ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿದ್ದರು. ಅವರ ಅಂತ್ಯಕ್ರಿಯೆ ಏಪ್ರಿಲ್ 19ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಪಿ.ಬಿ. ರಸ್ತೆಯ ಹಳೇ ಖಬರ್ಸ್ತಾನದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

















