ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯ ಬಳಿಕ ಇದೀಗ ಮನೆಗಳಿಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ ಯೋಜನೆಯ ನಿಯಮಗಳಲ್ಲೂ ಬದಲಾವಣೆ ತರಲು ಸರ್ಕಾರ ಸಜ್ಜಾಗಿದೆ.
ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಕುರಿತು ಸರ್ಕಾರವು ಮುಂದಿನ ಎರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಈ ಸಂಬಂಧ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸ್ಪಷ್ಟ ಮಾರ್ಗಸೂಚಿಗಳನ್ನು ಇಂಧನ ಇಲಾಖೆಗೆ ನೀಡಲಾಗುವ ನಿರೀಕ್ಷೆಯಿದೆ.
ಪ್ರಸ್ತುತ ರಾಜ್ಯದ ಸುಮಾರು 1.70 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು, ಈ ಯೋಜನೆಗಾಗಿ ಸರ್ಕಾರವು ಪ್ರತಿ ತಿಂಗಳು ಅಂದಾಜು 440 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.

ಸರ್ಕಾರದ ಗಮನಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಕೆಲವರು ಗೃಹಬಳಕೆ ಹೆಸರಿನಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಬಳಸುತ್ತಿರುವುದು ಪತ್ತೆಯಾಗಿದೆ. ಮನೆಗಳಿಗೆ ಹೊಂದಿಕೊಂಡಿರುವ ಅಂಗಡಿಗಳು, ವಾಣಿಜ್ಯ ಮಳಿಗೆಗಳು ಹಾಗೂ ಇತರೆ ವ್ಯಾಪಾರಿಕ ಉದ್ದೇಶಗಳಿಗೆ ಉಚಿತ ವಿದ್ಯುತ್ ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಇದಷ್ಟೇ ಅಲ್ಲದೆ, ರಾಜ್ಯದ ಹೊರಗಿನವರು ಕೂಡ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಅಂತಹ ಪ್ರಕರಣಗಳನ್ನೂ ಪರಿಶೀಲಿಸಲು ಸಿದ್ಧತೆ ನಡೆದಿದೆ.
ಆಧಾರ್, ಇ-ಕೆವೈಸಿ ಕಡ್ಡಾಯ ಸಾಧ್ಯತೆ
ಫಲಾನುಭವಿಗಳ ಮರುಪರಿಶೀಲನೆಗಾಗಿ ಆಧಾರ್ ಸಂಖ್ಯೆ, ಇ-ಕೆವೈಸಿ ಹಾಗೂ ಮೊಬೈಲ್ ಸಂಖ್ಯೆ ಪರಿಶೀಲನೆ ಪ್ರಕ್ರಿಯೆ ಜಾರಿಯಾಗುವ ಸಾಧ್ಯತೆ ಇದೆ. ಈ ಸಂಬಂಧ ಸೇವಾ ಸಿಂಧು ಪೋರ್ಟಲ್ ಮೂಲಕ ಅಗತ್ಯ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ.
ಕರ್ನಾಟಕದ ಮತದಾರರಿಗೆ ಮಾತ್ರ ಗ್ಯಾರಂಟಿ – ಸಿಎಂ ಡಿ.ಕೆ. ಶಿವಕುಮಾರ್
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಲಾಭ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ತುರ್ತುಗತಿಯಲ್ಲಿ ನೋಂದಣಿ ನಡೆದ ಕಾರಣ ಕೆಲವರು ಬೇರೆವರ ಮೊಬೈಲ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ್ದಾರೆ. ಪರಿಣಾಮವಾಗಿ ಗೃಹಲಕ್ಷ್ಮಿ ಹಣ ನಿಜವಾದ ಫಲಾನುಭವಿಗಳ ಬದಲು ಬೇರೆ ಖಾತೆಗಳಿಗೆ ಜಮೆಯಾಗುತ್ತಿರುವ ಉದಾಹರಣೆಗಳಿವೆ. ಇಂತಹ ಗೊಂದಲ ನಿವಾರಿಸಿ, ಅರ್ಹರ ಖಾತೆಗೆ ನೇರವಾಗಿ ಹಣ ತಲುಪುವ ವ್ಯವಸ್ಥೆ ಮಾಡಲಾಗುತ್ತದೆ. ಕರ್ನಾಟಕದ ಜನರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಸೌಲಭ್ಯ ನೀಡಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









