ಸುದ್ದಿಒನ್,ತುಮಕೂರು,ಮೇ.18: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ, ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯ ಅವರ ನಾಯಕತ್ವ ಬದಲಾದರೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರೇ ಸೂಕ್ತ ವ್ಯಕ್ತಿ ಎಂದು ರಾಜಣ್ಣ ಬಹಿರಂಗವಾಗಿ ಬೆಂಬಲಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಸ್ಥಾನ ಯಾರೊಬ್ಬರ ಸ್ವತ್ತಲ್ಲ. 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೆ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡುತ್ತಿದ್ದರಾ?” ಎಂದು ಪ್ರಶ್ನಿಸಿದರು. ಅಲ್ಲದೆ, ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲು ಸಾಧನಾ ಸಮಾವೇಶ ಆಯೋಜಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, “ಹೌದು, ನಾವು ಅದನ್ನೇ ಬಯಸುತ್ತೇವೆ” ಎಂದು ನೇರವಾಗಿ ಒಪ್ಪಿಕೊಂಡಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಸಿಎಂ ಪೈಪೋಟಿಯ ಮಧ್ಯೆ, ಈಗ ರಾಜಣ್ಣ ಅವರ ಈ ಸ್ಫೋಟಕ ಹೇಳಿಕೆಯಿಂದಾಗಿ ಜಿ. ಪರಮೇಶ್ವರ್ ಹೆಸರು ಮೂರನೇ ಶಕ್ತಿಯಾಗಿ ಮುಂಚೂಣಿಗೆ ಬಂದಂತಾಗಿದೆ.















