ಸುದ್ದಿಒನ್,ಬೆಂಗಳೂರು,ಮೇ.27: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆಯ ಮ್ಯೂಸಿಕಲ್ ಚೇರ್ ಆಟದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಹಳೆಯ ಹುಲಿ. ಅವರು ಯಾವಾಗ, ಯಾವ ರೀತಿಯ ದಾಳ ಉರುಳಿಸುತ್ತಾರೆ ಎಂಬುದನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಅವರು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡುವವರೆಗೂ ಯಾವುದನ್ನೂ ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮೂರು ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕೇವಲ ಎರಡುವರೆ ವರ್ಷ ಸಿಎಂ ಬದಲಾವಣೆಯ ಗೊಂದಲದಲ್ಲೇ ಕಳೆದುಹೋಯಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ ಅವರು ಕಾಂಗ್ರೆಸ್ ಸರ್ಕಾರಕ್ಕೆ ಜನರ ಸಂಕಷ್ಟಗಳಿಗಿಂತ ಅಧಿಕಾರ ಹಿಡಿಯುವುದೇ ಮುಖ್ಯವಾಗಿದೆ ಎಂದು ಕಿಡಿಕಾರಿದ್ದಾರೆ.ರಾಜ್ಯದ ಒಂದು ಭಾಗದಲ್ಲಿ ಭೀಕರ ಬರಗಾಲವಿದ್ದರೆ, ಮತ್ತೊಂದೆಡೆ ಪ್ರವಾಹದ ಭೀತಿ ಎದುರಾಗಿದೆ.ಸಿಲಿಕಾನ್ ಸಿಟಿ ಬೆಂಗಳೂರು ಸಣ್ಣ ಮಳೆಗೂ ಮುಳುಗಡೆಯಾಗುತ್ತಿದೆ. ಇದರ ಜೊತೆಗೆ ಕಸದ ವಿಲೇವಾರಿಯಲ್ಲೂ ದೊಡ್ಡ ಮಟ್ಟದ ಹಗರಣಗಳು ನಡೆಯುತ್ತಿವೆ.ಯಾವುದೇ ಸಚಿವರು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಜನರ ಸಮಸ್ಯೆ ಆಲಿಸುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕಾಸೂ ಇಲ್ಲದಂತಾಗಿದೆ.
ಒಂದೆಡೆ ಸಿದ್ದರಾಮಯ್ಯ ತಮ್ಮ ಸಿಎಂ ಪೀಠವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದರೆ, ಇನ್ನೊಂದೆಡೆ ಡಿ.ಕೆ. ಶಿವಕುಮಾರ್ ಆ ಖುರ್ಚಿಯನ್ನು ಕಬಳಿಸಲು ಹೊಂಚು ಹಾಕುತ್ತಿದ್ದಾರೆ. ಈ ಇಬ್ಬರ ಸ್ವಾರ್ಥದ ಮಧ್ಯೆ ರಾಜ್ಯದ ಬಡ ಜನ್ರು ಬೀದಿಗೆ ಬೀಳುತ್ತಿದ್ದಾರೆ” ಎಂದು ಶೋಭಾ ಆಕ್ರೋಶ ಹೊರಹಾಕಿದರು.










