ಸುದ್ದಿಒನ್, ಚಿತ್ರದುರ್ಗ. ಜೂನ್16: ಚುನಾವಣಾ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕಿನ ಬೀರೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕಿ ಕೆ.ಶಿವಲೀಲಾ ಅವರನ್ನು ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಜೂನ್ 20 ರಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಆರಂಭವಾಗಲಿದ್ದು, ಖಾಲಿ ಇರುವ ಬಿ.ಎಲ್.ಓ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿತ್ತು. ನಂ. 100 ಹಿರಿಯೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಲೀಲಾ ಅವರನ್ನು ಬಿ.ಎಲ್.ಓ ಕರ್ತವ್ಯಕ್ಕೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ಆದೇಶವನ್ನು ಸ್ವೀಕರಿಸಲು ನಿರಾಕರಿಸಿದ ಶಿಕ್ಷಕಿ, ಲಾಗಿನ್ ಐಡಿ ಕ್ರಿಯೇಟ್ ಮಾಡಲು ಅಗತ್ಯವಿರುವ ದಾಖಲೆಗಳನ್ನು ನೀಡದೆ ಅಸಹಕಾರ ತೋರಿದ್ದರು.
ಈ ಸಂಬಂಧ ಹಿರಿಯೂರು ತಹಶೀಲ್ದಾರರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ, ಶಿಕ್ಷಕಿ ಯಾವುದೇ ಲಿಖಿತ ಉತ್ತರ ನೀಡಿರುವುದಿಲ್ಲ. ಇದರಿಂದಾಗಿ ಚುನಾವಣಾ ಆಯೋಗದ ಮಹತ್ವದ ಕಾರ್ಯದ ಪ್ರಗತಿಗೆ ಅಡ್ಡಿಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮತದಾರರ ನೋಂದಣಾಧಿಕಾರಿಗಳು ನೀಡಿದ ವರದಿಯನ್ನಾಧರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಈ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 134 ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(2)(8) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಅಮಾನತು ಅವಧಿಯಲ್ಲಿ ನೌಕರರು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಕೆ.ಸಿ.ಎಸ್ ನಿಯಮ 98ರ ಅನ್ವಯ ನಿಲಂಬನಾ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
============
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















