ಸೆಪ್ಟೆಂಬರ್ 17 ರಿಂದ ಚಿತ್ರದುರ್ಗದಲ್ಲಿ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ

3 Min Read

 

 

ಚಿತ್ರದುರ್ಗ. ಸೆ.16: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ವಸ್ತ್ರಾಂಜಲಿ-2025 ಇದೇ ಸೆ. 17 ರಿಂದ 30 ರವರೆಗೆ ಚಿತ್ರದುರ್ಗದ ವಿ.ಪಿ. ಬಡಾವಣೆ, ಅರಣ್ಯ ಇಲಾಖೆ ಎದುರಿನ ಉಮಾಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬಗಳ ಪ್ರಯುಕ್ತ ಇದೇ ಸೆ. 17 ರಿಂದ 30 ರವರೆಗೆ ಪ್ರತಿದಿನ ಬೆ. 10 ಗಂಟೆಯಿಂದ ರಾತ್ರಿ 9 ರವರೆಗೆ “ವಸ್ತ್ರಾಂಜಲಿ-2025” ಹೆಸರಿನಲ್ಲಿ ರಾಜ್ಯ ಹಾತ್ ಕರ್ಗಾ ವಿಶೇಷ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ವಿ.ಪಿ. ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.  ಜಿಲ್ಲೆಯ ಹಾಗೂ ಹೊರಜಿಲ್ಲೆಯ ಮತ್ತು ಹೊರ ರಾಜ್ಯಗಳ ಕೈಮಗ್ಗ ನೇಕಾರ ಸಹಕಾರ ಸಂಘಗಳ ನೇಕಾರರಿಂದ ಉತ್ಪಾದಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳ ಮಾರಾಟವನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಸಹಯೋಗದೊಂದಿಗೆ ಈ ಮೇಳ ಆಯೋಜಿಸಲಾಗಿದೆ.  ಮೇಳದಲ್ಲಿ ರಾಜ್ಯ ಸರ್ಕಾರದಿಂದ ಶೇ. 20 ರಷ್ಟು ರಿಯಾಯಿತಿ ದರದಲ್ಲಿ ಕೈಮಗ್ಗ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.  ಜಿಲ್ಲೆಯ ಖ್ಯಾತ ಮೊಳಕಾಲ್ಮೂರು ಅಪ್ಪಟ ರೇಷ್ಮೆ ಸೀರೆಗಳು, ಚಳ್ಳಕೆರೆಯ ವಿವಿಧ ನಮೂನೆಯ ಉಣ್ಣೆ ಕಂಬಳಿಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿ ಉತ್ಪಾದಿಸುತ್ತಿರುವ ಹತ್ತಿ ಕೈಮಗ್ಗ ಉತ್ಪನ್ನಗಳಾದ, ಲುಂಗಿಗಳು, ಬೆಡ್‍ಶೀಟ್, ಶರ್ಟಿಂಗ್‍ಗಳು, ಕೈವಸ್ತ್ರ, ಟವೆಲ್, ಇಳಕಲ್ ಸೀರೆಗಳು, ಗುಳೆಧಗುಡ್ಡ ಕಣ ಹಾಗೂ ಹೊರ ರಾಜ್ಯದ ಉಲ್ಲನ್ ಬ್ಲಾಂಕೆಟ್ ಇತ್ಯಾದಿ ಸೇರಿದಂತೆ ಎಲ್ಲಾ ರೀತಿಯ ಕೈಮಗ್ಗ ಉತ್ಪನ್ನಗಳು ನೇಕಾರ ಸಹಕಾರ ಸಂಘಗಳಿಂದ ನೇರವಾಗಿ ಗ್ರಾಹಕರಿಗೆ ಮಾರಾಟಕ್ಕೆ ಲಭ್ಯವಾಗುತ್ತವೆ.  ರಾಜ್ಯದಿಂದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಬಾಗಲಕೋಟೆ, ಗದಗ, ಹಾವೇರಿ, ಕಾರವಾರ, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಿಂದ ಮತ್ತು ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರಪ್ರದೇಶ, ತೆಲಂಗಾಣ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ದೆಹಲಿ ಹಾಗೂ ರಾಜ್ಯ ಕೈಮಗ್ಗ ನೇಕಾರ ಸಂಘದವರು ಮತ್ತು ನೇಕಾರರು ಭಾಗವಹಿಸಲಿದ್ದಾರೆ.
ಮೇಳದಲ್ಲಿ ಭಾಗವಹಿಸುವ ನೇಕಾರ ಸಹಕಾರ ಸಂಘಗಳಿಗೆ ಉಚಿತವಾಗಿ ಸುಸಜ್ಜಿತ ಮಳಿಗೆ ಹಾಗೂ ದಾಸ್ತಾನಿಗೆ ವಿಮೆ ಭದ್ರತೆ ಒದಗಿಸಲಾಗುವುದು, ಅಲ್ಲದೆ ಸಂಘಗಳಿಗೆ ದಿನಭತ್ಯೆ ಸೌಲಭ್ಯ ನೀಡಲಾಗುವುದು.  ಮೇಳದಲ್ಲಿ ಉತ್ತಮ ಗುಣಮಟ್ಟದ ಕೈಮಗ್ಗ ಉತ್ಪನ್ನಗಳು ರಿಯಾಯಿತಿ ದರದಲ್ಲಿ ದೊರೆಯುತ್ತಿದ್ದು, ಹೆಚ್ಚಿನ ಗ್ರಾಹಕರು ಮೇಳಕ್ಕೆ ಭೇಟಿ ನೀಡಿ, ಅವಕಾಶ ಸದುಪಯೋಗ ಪಡಿಸಿಕೊಂಡು, ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ತಳವಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸೆ. 17 ರಂದು ಸಂಜೆ 5 ಗಂಟೆಗೆ ಉದ್ಘಾಟನೆ : ಕೈಮಗ್ಗ ಮತ್ತು ಜವಳಿ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ವಸ್ತ್ರಾಂಜಲಿ-2025 ರ ಉದ್ಘಾಟನೆ ಸೆ. 17 ರಂದು ಸಂಜೆ 5 ಗಂಟೆಗೆ ನಗರದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದೆ.  ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಉದ್ಘಾಟನೆ ನೆರವೇರಿಸುವರು.  ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್, ಸಂಸದ ಗೋವಿಂದ ಕಾರಜೋಳ ಘನ ಉಪಸ್ಥಿತಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ವಹಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ. ಶ್ರೀನಿವಾಸ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ  ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ಅಧ್ಯಕ್ಷ ಬಿ.ಜೆ. ಗಣೇಶ್, ಕರ್ನಾಟಕ ಸಹಕಾರ ಖಾದಿಯೇತರ ಉಣ್ಣೆ ಕೈಮಗ್ಗ ನೇಕಾರರ ಮಹಾಮಂಡಳ ಅಧ್ಯಕ್ಷ ಚಳ್ಳಕೆರೆಯ ಮಲ್ಲಿಕಾರ್ಜುನ ಬಿ.,  ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿರ್ದೇಶಕ ಹೆಚ್. ತಿಪ್ಪೇಸ್ವಾಮಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ತಳವಾರ್ ತಿಳಿಸಿದ್ದಾರೆ.

Share This Article