ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ನೆರವೇರಿದ ಮರುದಿನ, ದೇವೇಗೌಡ ಕುಟುಂಬದ ಸದಸ್ಯರು ಹರದನಹಳ್ಳಿ ಸಮೀಪದ ಮಾವಿನಕೆರೆ ಬೆಟ್ಟದ ತಪ್ಪಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ವೇದಮಂತ್ರಗಳ ಪಠಣದೊಂದಿಗೆ ಪೂಜಾ ವಿಧಿವಿಧಾನಗಳು ನೆರವೇರಿದವು. ಈ ವೇಳೆ ಪತ್ನಿಯ ಅಗಲಿಕೆಯಿಂದ ತೀವ್ರ ದುಃಖದಲ್ಲಿದ್ದ ದೇವೇಗೌಡರು ಭಾವುಕರಾಗಿದ್ದು, ಪುತ್ರರಾದ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಸೇರಿದಂತೆ ಕುಟುಂಬದವರು ಅವರಿಗೆ ಧೈರ್ಯ ತುಂಬಿದರು. ಕುಟುಂಬಸ್ಥರು ಸಮಾಧಿಗೆ ಪುಷ್ಪನಮನ ಸಲ್ಲಿಸಿ, ಆತ್ಮಶಾಂತಿಗಾಗಿ ಪ್ರಾರ್ಥಿಸಿದರು.
ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಪ್ರದಾಯದಂತೆ ನಾಳೆ ಹಾಲು-ತುಪ್ಪ ಬಿಡುವ ಶಾಸ್ತ್ರ ಹಾಗೂ 11ನೇ ದಿನದ ಉತ್ತರಕ್ರಿಯೆ ಕುರಿತು ಕುಟುಂಬದವರು ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.
ತಾಯಿಯ ಅಂತಿಮ ದರ್ಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ಗೌರವ ಸಲ್ಲಿಸಿದ ಜನತೆ, ರಾಜಕೀಯ ನಾಯಕರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, “ತಾಯಿಯ ಆದರ್ಶಗಳನ್ನು ಜೀವನಪರ್ಯಂತ ಪಾಲಿಸಿಕೊಂಡು, ಕೊನೆಯುಸಿರಿರುವವರೆಗೂ ಜನಸೇವೆ ಮಾಡುತ್ತೇನೆ” ಎಂದು ಸಮಾಧಿಯ ಎದುರು ಸಂಕಲ್ಪ ಮಾಡಿರುವುದಾಗಿ ಹೇಳಿದರು.
ಇದೇ ವೇಳೆ, ಅಂತ್ಯಕ್ರಿಯೆ ಸಂದರ್ಭದಲ್ಲಿ ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವ ಬಗ್ಗೆ ವ್ಯಕ್ತವಾಗಿದ್ದ ಚರ್ಚೆಗೂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. “ಯಾವುದೇ ರಾಜಕೀಯ ಉದ್ದೇಶದಿಂದ ಅವರ ಹೆಸರನ್ನು ಬಿಡಲಿಲ್ಲ. ಅದು ಉದ್ದೇಶಪೂರ್ವಕವಾಗಿರಲಿಲ್ಲ” ಎಂದು ಅವರು ತಿಳಿಸಿದರು.
ಅಲ್ಲದೆ, ಚೆನ್ನಮ್ಮ ಅವರ ಸರಳತೆ, ತ್ಯಾಗ ಹಾಗೂ ಸೇವಾ ಮನೋಭಾವವನ್ನು ಜನರಿಗೆ ತಲುಪಿಸಿದ ಮಾಧ್ಯಮ ಪ್ರತಿನಿಧಿಗಳಿಗೂ ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದರು.
ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದ್ದರು. ಕುಟುಂಬದ ಧಾರ್ಮಿಕ ವಿಧಿವಿಧಾನಗಳು ಮುಂದಿನ ಕೆಲವು ದಿನಗಳವರೆಗೆ ಸಂಪ್ರದಾಯದಂತೆ ಮುಂದುವರಿಯಲಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









