ಬೆಂಗಳೂರು.ಜೂನ್.30: ರಾಜ್ಯದಲ್ಲಿ ಜೂನ್ 30ರಿಂದಲೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿಯಂತಹ ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಇತರ ಸೌಲಭ್ಯಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಂಟಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಮತದಾನದ ಹಕ್ಕನ್ನು ಬದುಕಿನ ಹಕ್ಕೆಂದು ಬಣ್ಣಿಸಿದ ಮುಖ್ಯಮಂತ್ರಿಗಳು, ಜೂನ್ 30ರಿಂದ ಜುಲೈ 29ರ ಅವಧಿಯಲ್ಲಿ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬಿಎಲ್ಓಗಳು ಒಟ್ಟು ಮೂರು ಬಾರಿ ಸಾರ್ವಜನಿಕರ ಮನೆ ಬಾಗಿಲಿಗೆ ಬಂದು ಎನ್ಯುಮರೇಷನ್ ಅರ್ಜಿಗಳನ್ನು ನೀಡಲಿದ್ದಾರೆ ಎಂದು ತಿಳಿಸಿದರು. ಮತದಾರರು ಈ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳು ಮತ್ತು ಹೊಸ ಭಾವಚಿತ್ರಗಳೊಂದಿಗೆ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಮತದಾನದ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಆಗಸ್ಟ್ 5ರಂದು ಕರಡು ಮತಪಟ್ಟಿ ಪ್ರಕಟಿಸಲಾಗುವುದು ಹಾಗೂ ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿಎಲ್ಎಗಳು ಕೂಡ ಈ ಪ್ರಕ್ರಿಯೆಯಲ್ಲಿ ನೆರವು ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಮತದಾನದ ಹಕ್ಕು – ಬದುಕಿನ ಹಕ್ಕು
ಜೂನ್ 30 ರಿಂದ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲಿದ್ದು, ರಾಜ್ಯದ ಎಲ್ಲಾ ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಬಿಎಲ್ಓಗಳು ಒಟ್ಟು ಮೂರು… pic.twitter.com/UOF6vq7VOQ
— DK Shivakumar (@DKShivakumar) June 29, 2026
ಅರ್ಜಿ ಸಲ್ಲಿಕೆಗೆ ಜನರು ತಮ್ಮ ಎಪಿಕ್ ಕಾರ್ಡ್ ಸಂಖ್ಯೆ ಸೇರಿದಂತೆ ಜನನ ಪ್ರಮಾಣಪತ್ರ, ಪಾಸ್ಪೋರ್ಟ್, ಜಾತಿ ಪ್ರಮಾಣಪತ್ರ, ಅರಣ್ಯ ಹಕ್ಕು ಪತ್ರ, ಸರ್ಕಾರಿ ವಸತಿ ದಾಖಲೆ ಮತ್ತು ಪಿಂಚಣಿ ದಾಖಲೆ ಒಳಗೊಂಡಂತೆ ಒಟ್ಟು 11 ಮಾದರಿಯ ಗುರುತಿನ ಚೀಟಿಗಳನ್ನು ಬಳಸಬಹುದಾಗಿದೆ. ಸರ್ಕಾರ ಈಗಾಗಲೇ ಹಿಂದುಳಿದ ವರ್ಗ ಹಾಗೂ ಎಸ್.ಸಿ/ಎಸ್.ಟಿ ಸೇರಿದಂತೆ ಒಟ್ಟು 5.50 ಕೋಟಿ ಜನರಿಗೆ ಅಧಿಕೃತ ಜಾತಿ ಪ್ರಮಾಣಪತ್ರ ವಿತರಿಸಿದ್ದು, ಇವುಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಜಾತಿ ಪ್ರಮಾಣಪತ್ರದಲ್ಲಿ ಸರಿಯಾದ ದೂರವಾಣಿ ಸಂಖ್ಯೆ ನಮೂದಿಸಿದವರು ವಾಟ್ಸಾಪ್ ಮೂಲಕವೂ ಇದನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಕಂದಾಯ ಇಲಾಖೆಯ ವತಿಯಿಂದ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್ ಅವರಿಗೆ ಅಧಿಕಾರ ನೀಡಲಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ಗಳಲ್ಲಿ ಒಟ್ಟು 49,320 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಬಾಡಿಗೆ ಮನೆಯಲ್ಲಿ ವಾಸಿಸುವವರು ಆಧಾರ್ ಕಾರ್ಡ್, ಬಾಡಿಗೆ ದಾಖಲೆ ಹಾಗೂ ಆ ಕ್ಷೇತ್ರದ ಮತಪಟ್ಟಿ ಸಂಖ್ಯೆಯನ್ನು ಒದಗಿಸಿ ಸ್ಥಳೀಯ ಆಡಳಿತದಿಂದ ಪ್ರಮಾಣಪತ್ರ ಪಡೆಯಬಹುದು. ನಮ್ಮ ರಾಜ್ಯದ ಪ್ರತಿಯೊಬ್ಬರಿಗೂ ಈ ದಾಖಲೆಗಳನ್ನು ಪಡೆಯಲು ಮುಕ್ತ ಅವಕಾಶವಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಮತದಾನದ ಹಕ್ಕನ್ನು ಕಳೆದುಕೊಂಡರೆ ಮುಂದಿನ ದಿನಗಳಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಹಾಗೂ ರಾಜ್ಯ ಸರ್ಕಾರದ ಇತರೆ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗಲಿದೆ. ಸದ್ಯದಲ್ಲೇ ಎಲ್ಲಾ ಯೋಜನೆಗಳ ಫಲಾನುಭವಿಗಳ ಮಾಹಿತಿ ಪಡೆಯುವ ಪ್ರಕ್ರಿಯೆ ಆರಂಭವಾಗಲಿದ್ದು, ತಕ್ಷಣಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದರು. ಇದೇ ವೇಳೆ, 18 ವರ್ಷ ತುಂಬಿರುವ ಹೊಸ ಮತದಾರರು ಚುನಾವಣಾ ಆಯೋಗದ ‘ನಮೂನೆ 6’ (Form 6) ಅನ್ನು ವಯೋಮಿತಿ ದೃಢೀಕರಣ ಪತ್ರದೊಂದಿಗೆ ತುಂಬುವ ಮೂಲಕ ತಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಬಹುದು ಎಂದು ಅವರು ಕರೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













