ಪಠ್ಯದಷ್ಟೆ ಕ್ರೀಡೆಯೂ ಮುಖ್ಯ, ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಶಾಸಕ ಟಿ.ರಘುಮೂರ್ತಿ

1 Min Read

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.20 : ಪಠ್ಯದಷ್ಟೆ ಕ್ರೀಡೆಯೂ ಮುಖ್ಯವಾಗಿರುವುದರಿಂದ ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಳ್ಳುವಂತೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕ್ರೀಡಾಪಟುಗಳಿಗೆ ಕರೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಳ್ಳಕೆರೆ ಇವರುಗಳ ಸಹಯೋಗದೊಂದಿಗೆ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ 12 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಹಾಗೂ ವಿ.ವಿ. ತಂಡದ ಆಯ್ಕೆ 2023-24 ನೇ ಸಾಲಿನ ಮುಕ್ತಾಯ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

134 ಕಾಲೇಜುಗಳ 800 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಚಳ್ಳಕೆರೆ ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಆರ್.ರಂಗಪ್ಪ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್‍ನಲ್ಲಿ ತಲ್ಲೀನರಾಗುವುದೇ ಕ್ರೀಡೆ ಎಂದುಕೊಂಡಿರುವುದರಿಂದ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪುರುಷರ ವಿಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ತಂಡ ತನ್ನದಾಗಿಸಿಕೊಂಡಿತು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಧಿಕಾರಿ ಡಾ.ವೀರಪ್ಪ, ಕ್ರೀಡಾಕೂಟದ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ, ರಾಷ್ಟ್ರ ಮಟ್ಟದ ತೀರ್ಪುಗಾರ ಅರುಣ್, ಅನಿಲ್‍ಕುಮಾರ್, ಗಂಗಾಧರ್, ಡಾ.ವೀರೇಂದ್ರ, ಡಾ.ಪಾಪಣ್ಣ, ರಘುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ, ಇತಿಹಾಸ ಉಪನ್ಯಾಸಕಿ ಜಯಮ್ಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks