ಚಿತ್ರದುರ್ಗ. ಮೇ16: ಜಿಲ್ಲೆಯಾದ್ಯಂತ ಇದೇ ಮೇ 18 ರಿಂದ 23 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆಯಲಿದ್ದು, ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163 ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.
ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ಅಥವಾ ಇನ್ನಿತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.














