ಚಿಕ್ಕೋಡಿ : ರಾಜ್ಯಾದ್ಯಂತ ನಡೆಯುತ್ತಿರುವ ಎಸ್ ಎಸ್ ಎಲ್ ಸಿ ನಡುವೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದ ಗಂಭೀರ ಆರೋಪ ಕೇಳಿಬಂದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ವಿಶೇಷವಾಗಿ ರಾಯ್ ಭಾಗ್ ತಾಲೂಕಿನ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೆಲವು ಶಿಕ್ಷಕರು ಮತ್ತು ಸಿಬ್ಬಂದಿಯೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಪರೀಕ್ಷಾ ಕೊಠಡಿಗಳಲ್ಲೇ ಪ್ರಶ್ನೆ ಪತ್ರಿಕೆಯ ಉತ್ತರಗಳನ್ನು ಹೇಳಿಕೊಡುವ ಮಟ್ಟಕ್ಕೆ ಸಿಬ್ಬಂದಿ ಇಳಿದಿದ್ದಾರೆ ಎನ್ನಲಾಗುತ್ತಿದೆ.

ಪರೀಕ್ಷೆ ಬರೆದು ಬಂದ ವಿದ್ಯಾರ್ಥಿಯೊಬ್ಬ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ವಿಡಿಯೋದಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮಗಳ ಬಗ್ಗೆ ವಿದ್ಯಾರ್ಥಿ ವಿವರಿಸಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ನಕಲು ತಡೆಗಟ್ಟಲು ಈ ಬಾರಿ ಶಿಕ್ಷಣ ಇಲಾಖೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕಡ್ಡಾಯಗೊಳಿಸಿದ್ದರೂ, ಕೆಲ ಸಿಬ್ಬಂದಿ ಅದನ್ನೂ ಲೆಕ್ಕಿಸದೇ ಅಕ್ರಮಕ್ಕೆ ಕೈಜೋಡಿಸಿರುವುದು ಪಾರದರ್ಶಕತೆಗೆ ಧಕ್ಕೆಯಾಗಿದೆ. ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಶಿಕ್ಷಣ ಇಲಾಖೆಯ ಮೇಲ್ವಿಚಾರಣಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಉದ್ಭವವಾಗಿದ್ದು, ತಪ್ಪಿತಸ್ಥ ಶಿಕ್ಷಕರು ಮತ್ತು ಸಿಬ್ಬಂದಿಯ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಇಲ್ಲವಾದರೆ ಮುಂದಿನ ಪರೀಕ್ಷೆಗಳಲ್ಲಿಯೂ ಇದೇ ರೀತಿಯ ಅಕ್ರಮಗಳು ಮರುಕಳಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










