ಸುದ್ದಿಒನ್, ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗೆ ಸಕಾಲದಲ್ಲಿ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಜಾರಿಗೆ ತರಲಾಗಿರುವ ‘ಕರ್ತವ್ಯ’ (KAAMS) ಮೊಬೈಲ್ ಅಪ್ಲಿಕೇಶನ್ ಬಳಕೆಯ ಕುರಿತು ರಾಜ್ಯ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಹತ್ವದ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳೆದ ಜೂನ್ 4, 2026 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿತ್ತು. ಇದರ ಭಾಗವಾಗಿ ಎಲ್ಲಾ ಸಿಬ್ಬಂದಿಗಳು ‘ಕರ್ತವ್ಯ’ (KAAMS) ಮೊಬೈಲ್ ಆಪ್ನಲ್ಲಿ ನೋಂದಣಿ ಮಾಡಿಕೊಂಡು, ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕಿದೆ.
ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದ ಪ್ರಕಾರ, ಜೂನ್ 16, 2026 ರವರೆಗಿನ ಅಂಕಿಅಂಶಗಳನ್ನು ಪರಿಶೀಲಿಸಿದಾಗ ರಾಜ್ಯದಲ್ಲಿ ಇನ್ನೂ 2,13,925 ಅಧಿಕಾರಿಗಳು/ನೌಕರರು ‘ಕರ್ತವ್ಯ’ ಮೊಬೈಲ್ ಆಪ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬೇಜವಾಬ್ದಾರಿತನವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳಿಗೆ ಈ ಕೆಳಗಿನಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳು ಈ ವಿಷಯದಲ್ಲಿ ವೈಯಕ್ತಿಕವಾಗಿ ಗಮನಹರಿಸಬೇಕು.ತಮ್ಮ ಜಿಲ್ಲ ವ್ಯಾಪ್ತಿಯಲ್ಲಿ ಇದುವರೆಗೂ ಆಪ್ನಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿ/ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಆದೇಶದ ಅನ್ವಯ ಕೈಗೊಂಡ ಕ್ರಮಗಳ ಕುರಿತು ಮುಂಬರುವ 7 ದಿನಗಳ ಒಳಗಾಗಿ ಕಡ್ಡಾಯವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಡಾ. ಶಾಲಿನಿ ರಜನೀಶ್ ಅವರು ಖಡಕ್ ಆದೇಶ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








