ಸುದ್ದಿಒನ್,ಚಿತ್ರದುರ್ಗ,ಮೇ.08:ರಾಜ್ಯದ ಸೂರ್ಯಕಾಂತಿ ಬೆಳೆಗಾರರ ಹಿತರಕ್ಷಣೆಗಾಗಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ 7,721 ರೂ. ದರ ನಿಗದಿಪಡಿಸಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಸೂರ್ಯಕಾಂತಿ ಹೆಚ್ಚಾಗಿ ಬೆಳೆಯುವ ಈ ಕೆಳಗಿನ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ:

ಚಿತ್ರದುರ್ಗ, ಬೆಳಗಾವಿ, ಬಳ್ಳಾರಿ, ವಿಜಯಪುರ.
ಚಾಮರಾಜನಗರ, ಬಾಗಲಕೋಟೆ, ಗದಗ, ಕಲಬುರಗಿ.
ವಿಜಯನಗರ, ರಾಯಚೂರು ಹಾಗೂ ಧಾರವಾಡ.
ಖರೀದಿ ಪ್ರಕ್ರಿಯೆಯ ವಿವರಗಳು
ರೈತರಿಂದ ಪಾರದರ್ಶಕವಾಗಿ ಖರೀದಿ ನಡೆಸಲು ವಿವಿಧ ಸಂಸ್ಥೆಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳು, ನಾಫೆಡ್ (NAFED) ಮತ್ತು ಎನ್ಸಿಸಿಎಫ್ (NCCF). ರಾಜ್ಯ ಸರ್ಕಾರದ ಸಂಸ್ಥೆ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ.
ರೈತರ ನೋಂದಣಿಗೆ 50 ದಿನ ಹಾಗೂ ಖರೀದಿಗೆ 60 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯ ಜೊತೆಜೊತೆಗೇ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಈ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ವೈಜ್ಞಾನಿಕ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ.



















