ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 09 : ರಾಜ್ಯದಲ್ಲಿರುವ 50 ಲಕ್ಷ ವಸತಿ ನಿವೇಶನ ರಹಿತರಿಗೆ ಭೂಮಿ ಗುರುತು ಮಾಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಪ್ರತಿ ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಕಚೇರಿ ಎದುರು ಚಳುವಳಿ ನಡೆಸಲಾಗುವುದೆಂದು ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ.ಎ.ಎಸ್.ಮೋನಪ್ಪ ಎಚ್ಚರಿಸಿದರು.
ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಸತಿ ಮತ್ತು ನಿವೇಶನಕ್ಕಾಗಿ ಸರ್ಕಾರವನ್ನು ಒತ್ತಾಯಿಸಲು ಹಾಸನದಲ್ಲಿ ಮೊದಲ ಸಮ್ಮೇಳನ ನಡೆಸಿದ್ದೇವೆ. ಚಿತ್ರದುರ್ಗದಲ್ಲಿ ನಡೆದ ಎರಡನೆ ಸಮ್ಮೇಳನದಲ್ಲಿ ಅನೇಕ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ವಸತಿ ನಿವೇಶನ ರಹಿತರಿಗೆ ವಸತಿ ಸೌಲಭ್ಯಕ್ಕಾಗಿ ರಾಜ್ಯಾದ್ಯಂತ ಹೋರಾಟವನ್ನು ಚುರುಕುಗೊಳಿಸುತ್ತೇವೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಭೂಮಿ ಗುರುತು ಮಾಡಬೇಕೆಂದು ಒತ್ತಾಯಿಸಿದರು.
ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕಾಂ.ಡಾ.ಕೆ.ಎಸ್.ಜನಾರ್ಧನ್ ಮಾತನಾಡುತ್ತ ಇಲ್ಲಿಯವರೆಗೂ ರಾಜ್ಯದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಯಾರು ನಮ್ಮ ಸಮಸ್ಯೆಗಳನ್ನು ಕೇಳಲಿಲ್ಲ. ರಾಜ್ಯದಲ್ಲಿ ಐವತ್ತು ಲಕ್ಷ ಕುಟುಂಬಗಳಿಗೆ ವಾಸಿಸಲು ಸ್ವಂತ ಮನೆಯಿಲ್ಲ. ಎಲ್ಲಾ ಪಕ್ಷಗಳು ಮತಗಳನ್ನು ಪಡೆದು ಗೆದ್ದ ನಂತರ ಕಡೆಗಣಿಸುತ್ತಿವೆ. ಉದ್ಯಮಿಗಳು, ಬಂಡವಾಳಶಾಹಿಗಳು, ಕಂಪನಿಗಳಿಗೆ ಸಾವಿರಾರು ಎಕರೆ ಭೂಮಿ ನೀಡಲು ಸರ್ಕಾರದ ಬಳಿ ಜಮೀನಿದೆ. ಬಡವರಿಗೆ ಏಕೆ ಕೊಡುತ್ತಿಲ್ಲ. ಕೌದಿಯಲ್ಲಿ ಶೆಡ್ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವುದು ಸರ್ಕಾರಕ್ಕೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜೀವ್ಗಾಂಧಿ ವಸತಿ ನಿಗಮದಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಮೂರು ವರ್ಷಗಳಾಯಿತು. ತೆಲಂಗಾಣದಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಐದು ಲಕ್ಷ ರೂ.ಗಳನ್ನು ನೀಡುತ್ತಿದೆ. ಕರ್ನಾಟಕದಲ್ಲಿಯೂ ಅದೇ ರೀತಿ ಹಣ ಕೊಡಬೇಕೆಂದು ಆಗ್ರಹಿಸಿದರು.
ಸಿ.ಪಿ.ಐ. ರಾಜ್ಯ ಕಾರ್ಯದರ್ಶಿ ಸಾ.ತಿ.ಸುಂದರೇಶ್ ಮಾತನಾಡಿ ಚಿತ್ರದುರ್ಗದಲ್ಲಿ ನಡೆದ ಸಮ್ಮೇಳನಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಲಿರುವ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಗಂಭೀರವಾಗಿ ಚರ್ಚಿಸಿದ್ದೇವೆ. ಜೂ.30 ರಿಂದ ಎಸ್.ಐ.ಆರ್. ಆರಂಭಗೊಳ್ಳಲಿದೆ. ವಲಸೆ ಹೋದವರು ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆಯಿದೆ. ಹನ್ನೊಂದು ದಾಖಲೆಗಳನ್ನು ಸಿದ್ದವಾಗಿಟ್ಟುಕೊಂಡು ಸಿಬ್ಬಂದಿಗಳು ಬಂದಾಗ ಮಾಹಿತಿ ಕೊಟ್ಟು ಅರ್ಹ ಮತದಾರರು ಮೂಲಭೂತ ಹಕ್ಕು ಉಳಿಸಿಕೊಳ್ಳಿ ಎಂದು ನಿವೇಶನ ಮತ್ತು ವಸತಿ ರಹಿತರಲ್ಲಿ ಮನವಿ ಮಾಡಿದರು.
ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡುತ್ತ ವಸತಿಗಾಗಿ ನಗರಸಭೆಗೆ 700 ಅರ್ಜಿಗಳನ್ನು ಹಾಕಿಸಿದ್ದೇವೆ. 32 ಪಂಚಾಯಿತಿಗಳಲ್ಲಿ ಆರು ಸಾವಿರ ಅರ್ಜಿಗಳನ್ನು ನಿವೇಶನ ಮತ್ತು ವಸತಿಗಾಗಿ ಕೊಡಿಸಿದ್ದೇವೆ. ಸಿಮೆಂಟ್, ಕಬ್ಬಿಣದ ಬೆಲೆ ಜಾಸ್ತಿಯಾಗಿದೆ. ಬಡವರು ಮನೆಗಳನ್ನು ಕಟ್ಟಿಕೊಳ್ಳಲು ಕನಿಷ್ಠ ಏಳು ಲಕ್ಷ ರೂ.ಗಳನ್ನು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಸಿ.ಪಿ.ಐ. ಪ್ರಧಾನ ಕಾರ್ಯದರ್ಶಿ ಕಾಂ.ಟಿ.ಆರ್.ಉಮಾಪತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















