ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ನಿನ್ನೆ ರಾತ್ರಿ ಸುಮಾರು 7 ಗಂಟೆ ವೇಳೆಗೆ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ.
ನಗರದ ಚೇಳಗುಡ್ಡ ಹಾಗೂ ನೆಹರು ನಗರ ಬಡಾವಣೆಗಳಲ್ಲಿ ಮನೆಗಳ ಮುಂದೆ ಆಟವಾಡುತ್ತಿದ್ದ ಮತ್ತು ಟ್ಯೂಷನ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಐದಾರು ವರ್ಷದ ಮಕ್ಕಳ ಮೇಲೆ ನಾಯಿಗಳು ದಿಢೀರನೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದೆ.
ನಗರದ ಜೋಳ ಗುಡ್ಡದಲ್ಲೂ ನಾಯಿ ಕಚ್ಚಿರುವ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ಮುಸ್ತಾಕ್ ಅಹಮದ್ ರವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಅಳಲನ್ನು ಆಲಿಸಿ ಸ್ಪಂದಿಸಿದ್ದಾರೆ. ಬಳಿಕ ನೇರವಾಗಿ ನಗರಸಭೆ ಕಚೇರಿಗೆ ತೆರಳಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾಳಿಗೊಳಗಾದ ಮಕ್ಕಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ, ಆಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಮತ್ತು ಅಗತ್ಯ ಔಷಧಗಳು ಸಿಗುತ್ತಿಲ್ಲ ಎಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.
ಬಡಾವಣೆಗಳಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದರೂ ನಗರಸಭೆ ಹಾಗೂ ಜಿಲ್ಲಾಡಳಿತ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಮತ್ತು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ನಗರಸಭೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಈ ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಮುಕ್ತಿ ಹಾಡಬೇಕು ಹಾಗೂ ಸಣ್ಣ ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯ ನಿನಿವಾಸಿಗಳಾದ ಜಯಮ್ಮ, ಸಬೀನಾ ಬಾನು ಸೇರಿದಂತೆ ಇತರರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









