ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ, ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ, ನಟ ಪ್ರಕಾಶ್ ರಾಜ್ ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಜಂಟಿ ಹೇಳಿಕೆ ಬಿಡುಗಡೆ ಮಾಡಿ, ಈ ಕ್ರಮವನ್ನು ‘ಅರ್ಹ ಮತದಾರರನ್ನು ಪ್ರಜಾಸತ್ತಾತ್ಮಕ ವ್ಯವಸ್ಥೆಯಿಂದ ಹೊರಗಟ್ಟುವ ಸಂಚು’ ಎಂದು ಆರೋಪಿಸಿದ್ದಾರೆ.
ಎಸ್ಐಆರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲದೆ ನಡೆಯುತ್ತಿದ್ದು, ಸುಮಾರು 10 ರಾಜ್ಯಗಳಲ್ಲಿ 6 ಕೋಟಿಗೂ ಹೆಚ್ಚು ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹೊರಗುಳಿದವರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ವಲಸೆ ಕಾರ್ಮಿಕರು ಮತ್ತು ಅಲೆಮಾರಿ ಸಮುದಾಯದವರೇ ಹೆಚ್ಚು ಸಂಖ್ಯೆಯಲ್ಲಿರುವುದು ಆತಂಕಕಾರಿ ಎಂದು ಹೇಳಿದ್ದಾರೆ.ಈ ಬೆಳವಣಿಗೆ ದೇಶದ ವೈವಿಧ್ಯತೆಗೆ ಧಕ್ಕೆಯಾಗುವುದರ ಜೊತೆಗೆ ಸಂವಿಧಾನಬದ್ಧ ಮತದಾನದ ಹಕ್ಕಿಗೆ ಹಾನಿ ಉಂಟುಮಾಡುತ್ತದೆ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಚುನಾವಣಾ ಆಯೋಗ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ವಿಫಲವಾಗಿದೆ ಮತ್ತು ರಾಜಕೀಯ ಪಕ್ಷಪಾತ ತೋರಿಸುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ನುಸುಳುಕೋರರನ್ನು ಪತ್ತೆಹಚ್ಚುವ ಹೆಸರಿನಲ್ಲಿ ಎಸ್ಐಆರ್ ನಡೆಸಲಾಗುತ್ತಿದೆ ಎಂಬುದಾದರೂ, ಗುರುತಿಸಲಾದ ನುಸುಳುಕೋರರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯಿಲ್ಲ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಸುಮಾರು 35 ಲಕ್ಷ ಅರ್ಜಿಗಳ ಪರಿಶೀಲನೆ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಿ, ಈಗಾಗಲೇ ನಡೆದಿರುವ ಪರಿಷ್ಕರಣೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಗ್ರಾಮಸಭೆ ಹಾಗೂ ವಾರ್ಡ್ ಮಟ್ಟದಲ್ಲಿ ಕಟ್ಟುನಿಟ್ಟಿನ ಪರಿಶೀಲನೆಯ ನಂತರವೇ ಅಂತಿಮ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಪಟ್ಟಿಯಿಂದ ಹೊರಗುಳಿದವರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬೇಡಿಕೆಗಳನ್ನು ಪರಿಗಣಿಸದಿದ್ದಲ್ಲಿ ದೇಶದಾದ್ಯಂತ ತೀವ್ರ ಹೋರಾಟ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಜಂಟಿ ಹೇಳಿಕೆಗೆ ಯೋಗೇಂದ್ರ ಯಾದವ್, ತೀಸ್ತಾ ಸೆತಲ್ವಾಡ್, ತುಷಾರ್ ಗಾಂಧಿ, ಜಿಗ್ನೇಶ್ ಮೆವಾನಿ ಸೇರಿದಂತೆ ಹಲವರು ಸಹಿ ಹಾಕಿದ್ದಾರೆ.


















