ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ರಾಜ್ಯ ಸಂಪುಟ ಸಭೆಯು ನಿರ್ಧರಿಸಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಈ ಚುನಾವಣೆಗಳನ್ನು ನಡೆಸಲಾಗುತ್ತಿದೆ ಎಂಬುದು ಸರ್ಕಾರದ ವಾದ. ಆದರೆ ಪ್ರಜಾತಾಂತ್ರಿಕ ವಾತಾವರಣಕ್ಕೆ ಅವಶ್ಯಕವಾದ ವಿವಿಧ ವೈಚಾರಿಕತೆಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿ ಸಂಘಟನೆಗಳನ್ನೇ ಈ ಚುನಾವಣೆಗಳಿಂದ ದೂರವಿಡಲಾಗಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಯಾವುದೇ ವೈಚಾರಿಕತೆ ಹಾಗೂ ಸಂಘಟನೆಯನ್ನು ಪ್ರತಿನಿಧಿಸುವುದನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಕಾಲೇಜು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳ ಪ್ರಜಾತಾಂತ್ರಿಕ ಹಕ್ಕನ್ನೇ ಸರ್ಕಾರ ಕಸಿಯುತ್ತಿದೆ.
ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಹಾಗೂ ಅಪ್ರಜಾತಾಂತ್ರಿಕ ನಡೆಯನ್ನು ಎಐಡಿಎಸ್ಓ, ಎಐಎಸ್ಎಫ್, ಎಸ್ಎಫ್ಐ ಹಾಗೂ ಎಐಎಸ್ಎ ವಿದ್ಯಾರ್ಥಿ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತವೆ. ವಿದ್ಯಾರ್ಥಿಗಳನ್ನು ಪ್ರಜ್ಞಾವಂತರನ್ನಾಗಿಸದೆ ಕೇವಲ ಕಾಲೇಜು ಕಾರ್ಯಕ್ರಮಗಳ ಆಯೋಜನೆಗೆ ಸೀಮಿತಗೊಳಿಸುವುದು ಸರ್ಕಾರದ ಹುನ್ನಾರವಾಗಿದೆ. ರಾಜ್ಯ ಸರ್ಕಾರವು ಲಿಂಗ್ಡೋ ಕಮಿಟಿ ಶಿಫಾರಸುಗಳನ್ನು ಆಧರಿಸಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಹೊರಟಿದೆ. ಇದರ ಪ್ರಕಾರವೇ ನಡೆಯುತ್ತಿರುವ ದೇಶದ ಅನೇಕ ವಿವಿಗಳ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಸಕ್ರಿಯವಾಗಿ ಭಾಗವಹಿಸುತ್ತಿವೆ (ಉದಾಹರಣೆ: HCU, JNU, DU, Jadavpur University, ಹಾಗೂ ಇತರೆ ವಿವಿಗಳು).
ಕರ್ನಾಟಕ ರಾಜ್ಯ ಸರ್ಕಾರವು ಕೂಡಲೇ ತನ್ನ ವಿದ್ಯಾರ್ಥಿ ವಿರೋಧಿ ನಿರ್ಧಾರವನ್ನು ಹಿಂಪಡೆಯಬೇಕು ಮತ್ತು ವಿದ್ಯಾರ್ಥಿ ಸಂಘದ ಚುನಾವಣೆಗಳಲ್ಲಿ ವಿದ್ಯಾರ್ಥಿ ಸಂಘಟನೆಗಳಿಗೆ ಮುಕ್ತ ಪ್ರವೇಶ ನೀಡಬೇಕೆಂದು ಎಡ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸುತ್ತವೆ.










