ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಈಗಷ್ಟೇ ರಾಯರ ದರ್ಶನ ಮುಗಿಸಿಕೊಂಡು, ಸಂಕಲ್ಪ ಮಾಡಿಕೊಂಡು ಬರುತ್ತಿದ್ದಾರೆ. ಸಿಎಂ ಆಗುವ ದೊಡ್ಡ ಆಸೆಯಲ್ಲಿರುವಾಗ, ಯತೀಂದ್ರ ಸಿದ್ದರಾಮಯ್ಯ ಅವರು ಉತ್ತರಾಧಿಕಾರದ ಕಿಡಿ ಹಚ್ಚಿದ್ದಾರೆ. ಸಿಎಂ ಸಿದ್ದರಾಮಯ್ಯ ನಂತರ ಯಾರು ಸಿಎಂ ಆಗಬಹುದು ಎಂಬ ಚರ್ಚೆಯನ್ನ ಹುಟ್ಟು ಹಾಕಿದ್ದಾರೆ.
ನಮ್ಮ ತಂದೆಯವರು ರಾಜಕೀಯ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ನಾಯಕ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಿಕೊಳ್ಳುವ ನಾಯಕ ಬೇಕು. ಸತೀಶ್ ಜಾರಕಿಹೊಳಿ ಅಂತಹ ಜವಾಬ್ದಾರಿ ನಿಭಾಯಿಸುತ್ತಾರೆ ಎಂಬ ಮಾತನ್ನ ಹೇಳಿದ್ದರು.
ಯಾವಾಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಯ್ತೋ ಅದಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡು ಇರುವವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆಯನ್ನು ಹೊಂದಿದ್ದಾರೆ. ಅದೇ ಸಿದ್ಧಾಂತದಲ್ಲಿ ಹೋಗುತ್ತಿದ್ದಾರೆ. ಆ ರೀತಿ ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನು ಲೀಡ್ ಮಾಡಲಿ ಎಂಬ ಉದ್ದೇಶದಿಂದ ನಾನು ಆ ಮಾತನ್ನ ಹೇಳಿದ್ದೇನೆ. ರಾಜಕೀಯದ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಏನು ಹೇಳಿದ್ದಾರೋ ಅವರನ್ನೇ ಕೇಳಬೇಕು, ಅವರ ಬಳಿಯೇ ಹೋಗಿ ಕೇಳಿ. ನನ್ನ ಬಳಿ ಕೇಳಿದರೆ ಏನಾಗಬೇಕು. ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ. ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳಿದ್ದೀವಿ, ಪಕ್ಷ ಏನು ಹೇಳುತ್ತೋ ಅದನ್ನು ಒಟ್ಟಿಗೆ ಮಾಡಿಕೊಂಡು ಹೋಗ್ತೀವೆಂದು ಹೇಳಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ


