ಬೆಂಗಳೂರು: ಕುರ್ಚಿ ಕದನದ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದೆ. 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. ಇದೀಗ ನೋಟೀಸ್ ಜಾರಿಯಾಗಿದೆ.
ನ್ಯಾ.ವಿಕ್ರಮನಾಥ್ ನೇತೃತ್ವ ದ್ವಿ ಸದಸ್ಯ ಪೀಠ, ನೋಟೀಸ್ ನೀಡಿದೆ. 2023ರಲ್ಲಿ ಚುನಾವಣೆ ನಡೆದಿತ್ತು. ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷ ನೀಡಿ, ಸಿದ್ದರಾಮಯ್ಯ ಅವರು ಗೆದ್ದಿದ್ದಾರೆ. ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆದುಕೊಂಡಿದ್ದಾರೆ. ಇದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್ ಆಗ್ರಹ ಮಾಡಿದ್ದರು. ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123 (1) ಮತ್ತು ಸೆಕ್ಷನ್ 123 (2) ಪ್ರಕಾರ, ಚುನಾವಣಾ ಪ್ರಚಾರದ ವೇಳೆ ಗ್ಯಾರಂಟಿಗಳನ್ನು ಘೋಷಿಸುವುದು ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎಂದು ಅರ್ಜಿ ಸಲ್ಲಿಕೆ ಮಾಡಿದ್ದರು.
ಸಿದ್ದರಾಮಯ್ಯ ಅವರ ಪರವಾಗಿ ವಾದಿಸಿಸದ್ದ ಹಿರಿಯ ವಕೀಲ ರವಿವರ್ಮ ಕುಮಾರ್, ಶಂಕರ್ ಅವರ ಆರೋಪಗಳಿಗೆ ಕೌಂಟರ್ ಕೊಟ್ಟಿದ್ದರು. ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳಿಂದ ಆಶ್ವಾಸನೆಗಳನ್ನು ನೀಡುವುದಕ್ಕೆ ಅವಕಾಶವಿದೆ ಎಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ಶಂಕರ್ ಅವರ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ನೋಟೀಸ್ ಜಾರಿಯಾಗಿದೆ.





