ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಭೇಟಿ ನೀಡಲಿದ್ದು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಹಿಂದೆ ತಮಿಳುನಾಡಿನ ದಿಗ್ಗಜ ನಾಯಕರುಗಳಾದ ಎಂಜಿಆರ್ ಮತ್ತು ಜಯಲಲಿತಾ ಅವರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದರು. ಇದೀಗ ಅದೇ ಪರಂಪರೆಯನ್ನು ಮುಂದುವರಿಸಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೂಡ ದೇವಿಯ ಆಶೀರ್ವಾದ ಪಡೆಯಲಿದ್ದಾರೆ ಎಂಬುದು ವಿಶೇಷವಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ವಿಜಯ್ ಅವರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ನೆರವೇರಿಸುವ ಸಾಧ್ಯತೆಯಿದೆ. ಪೂಜೆ ಪೂರ್ಣಗೊಂಡ ತಕ್ಷಣವೇ ಅವರು ತಮಿಳುನಾಡಿಗೆ ಮರಳಲಿದ್ದಾರೆ.ಈ ಭೇಟಿ ಸಂಪೂರ್ಣವಾಗಿ ಧಾರ್ಮಿಕ ಉದ್ದೇಶದ್ದಾಗಿದ್ದು, ಯಾವುದೇ ಸಾರ್ವಜನಿಕ ಸಭೆ, ರಾಜಕೀಯ ಕಾರ್ಯಕ್ರಮ ಅಥವಾ ಸಮಾರಂಭಗಳನ್ನು ಆಯೋಜಿಸಲಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ವಿವಿಐಪಿ ಭದ್ರತಾ ಕ್ರಮಗಳ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ತಮ್ಮ ದರ್ಶನದ ಸಮಯವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭದ್ರತಾ ತಪಾಸಣೆಗಳು ಹೆಚ್ಚಾಗುವ ಕಾರಣ ಸಾಮಾನ್ಯ ದರ್ಶನಕ್ಕೆ ವಿಳಂಬ ಉಂಟಾಗುವ ಸಾಧ್ಯತೆಯಿದೆ.
ಮುಖ್ಯ ಪ್ರವೇಶ ದ್ವಾರ, ದೇವಸ್ಥಾನದ ಒಳಾಂಗಣ ಹಾಗೂ ಮುಖ್ಯಮಂತ್ರಿ ಸಂಚರಿಸುವ ಮಾರ್ಗಗಳಲ್ಲಿ ಅನಗತ್ಯವಾಗಿ ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಮತ್ತು ಭಕ್ತರು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಿ ಸುಗಮ ದರ್ಶನಕ್ಕೆ ನೆರವಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.














