Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಆಗಮನದಿಂದ ಚಿತ್ರದುರ್ಗ ಕೃಷಿ ಕ್ಷೇತ್ರದಲ್ಲಿ ಹೊಸ ಬದಲಾವಣೆ ಸಾಧ್ಯ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆ.9: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಕಾಳಜಿ ವಹಿಸಿದ್ದು, ಚಿತ್ರದುರ್ಗ ಜಿಲ್ಲೆಗೆ ಭದ್ರಾ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಭದ್ರಾ ನೀರಿಗಾಗಿ ಕಾಯುತ್ತಿದ್ದ ಜಿಲ್ಲೆಯ ರೈತರಿಗೆ ನೀರು ಹರಿದುಬಂದಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ಜಿಲ್ಲೆಯ ನೀರಾವರಿ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗುವ ನಿರೀಕ್ಷೆ ಇದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಹಾಗೂ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಪ್ರಮುಖವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ಭದ್ರಾ ನೀರು ಜಿಲ್ಲೆಯ ಕೆರೆಗಳಿಗೆ ಲಭ್ಯವಾದರೆ ರೈತರಿಗೆ ಸ್ಥಿರವಾದ ನೀರಿನ ಮೂಲ ದೊರೆಯುವಂತಾಗಲಿದೆ ಎಂದರು.

ಕೆರೆಗಳಿಗೆ ನೀರು ಹರಿದುಬಂದಾಗ ಕೇವಲ ಕೆರೆಗಳೇ ತುಂಬುವುದಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮರುಪೂರಣಕ್ಕೂ ಸಹಕಾರಿಯಾಗಲಿದೆ. ಇದರಿಂದ ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ನೀರಾವರಿ ವಿಸ್ತರಣೆಯಾದರೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಅವಕಾಶ ದೊರೆಯುವುದರ ಜೊತೆಗೆ ಕೃಷಿ ಆಧಾರಿತ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.

ರೈತರ ಬಹುದಿನಗಳ ನಿರೀಕ್ಷೆಗೆ ಸ್ಪಂದನೆ :

ಭದ್ರಾ ಮೇಲ್ದಂಡೆ ಯೋಜನೆಗಾಗಿ ಜಿಲ್ಲೆಯ ರೈತರು ಹಾಗೂ ವಿವಿಧ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿವೆ. ನೀರಿನ ಸಮಸ್ಯೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಈ ಯೋಜನೆ ಆಶಾಕಿರಣವಾಗಿದೆ. ಯೋಜನೆಯ ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಕಾಮಗಾರಿಗಳ ಪ್ರಗತಿ, ಕಾಲುವೆ ವ್ಯವಸ್ಥೆ ಹಾಗೂ ನೀರು ಹಂಚಿಕೆ ವ್ಯವಸ್ಥೆಯ ಮೇಲೆ ಸಂಬAಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು, ಚಿತ್ರದುರ್ಗ ಜಿಲ್ಲೆಯ ಕೃಷಿ ಅಭಿವೃದ್ಧಿಗೆ ನೀರಾವರಿ ಅತ್ಯಂತ ಪ್ರಮುಖವಾಗಿದೆ. ಮಳೆಯ ಅನಿಶ್ಚಿತತೆ ಹಾಗೂ ಬರಗಾಲದ ಪರಿಸ್ಥಿತಿಯಿಂದ ರೈತರು ಪದೇಪದೇ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಭದ್ರಾ ನೀರು ಲಭ್ಯವಾದಲ್ಲಿ ಕೃಷಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ರೈತರ ಆದಾಯವನ್ನೂ ಸುಧಾರಿಸಲು ಸಹಕಾರಿಯಾಗಲಿದೆ ಇಂದು ಅಭಿಪ್ರಾಯ ತಿಳಿಸಿದ್ದಾರೆ.

ಕುಡಿಯುವ ನೀರಿಗೂ ಅನುಕೂಲ

ಭದ್ರಾ ಮೇಲ್ದಂಡೆ ಯೋಜನೆಯಿಂದ ಕೆರೆಗಳು ಹಾಗೂ ಜಲಮೂಲಗಳಿಗೆ ನೀರು ಲಭ್ಯವಾದರೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಗಲಿದೆ. ಬೇಸಿಗೆ ಸಂದರ್ಭದಲ್ಲಿ ನೀರಿನ ಮೂಲಗಳು ಬತ್ತಿಹೋಗುವುದರಿಂದ ಎದುರಾಗುವ ಸಮಸ್ಯೆಯನ್ನು ಕಡಿಮೆ ಮಾಡಲು ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಸುಧಾರಣೆ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಜನೆಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ನೀರು ನಿಗದಿತ ಪ್ರದೇಶಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನೀರಿನ ಬಳಕೆಯಲ್ಲಿ ವೈಜ್ಞಾನಿಕ ನಿರ್ವಹಣೆ, ಕೆರೆಗಳ ಸಂರಕ್ಷಣೆ ಹಾಗೂ ನೀರು ವ್ಯರ್ಥವಾಗದಂತೆ ಕ್ರಮವಹಿಸುವುದು ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡು ಜಿಲ್ಲೆಯ ಕೆರೆಗಳಿಗೆ ಸಮರ್ಪಕವಾಗಿ ನೀರು ಲಭ್ಯವಾದರೆ ಚಿತ್ರದುರ್ಗ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರೈತರ ಬಹುದಿನಗಳ ನೀರಿನ ನಿರೀಕ್ಷೆ ಈಡೇರುವುದರ ಜೊತೆಗೆ ಮಧ್ಯ ಕರ್ನಾಟಕದ ಅಭಿವೃದ್ಧಿಗೂ ಯೋಜನೆ ಹೊಸ ವೇಗ ನೀಡಲಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಜನಪ್ರತಿನಿಧಿಗಳು, ಹೋರಾಟಗಾರರು ಸಂಘ ಸಂಸ್ಥೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಅದರ ಅನ್ವಯವಾಗಿ ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದಿದ್ದಾಳೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now