ರಾಜ್ಯ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದ ಕೋಟ್ಯಂತರ ಗೃಹಿಣಿಯರ ಆರ್ಥಿಕ ಶಕ್ತಿಯಾಗಿರುವ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 2026-27ನೇ ಸಾಲಿನ ಬಜೆಟ್ನಲ್ಲಿ ಬೃಹತ್ ಕೊಡುಗೆ ನೀಡಿದ್ದಾರೆ.
ರಾಜ್ಯದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಗೆ ಈ ಸಾಲಿನ ಬಜೆಟ್ನಲ್ಲಿ ಬರೋಬ್ಬರಿ 28,608 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಮೀಸಲಿಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ‘ಅಕ್ಕಪಡೆ ಯೋಜನೆ ‘ಯನ್ನ ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಉಪನ್ಯಾಸಕರಿಗೆ ಇದು ಅನ್ವಯ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಈ ಕ್ರಮದಿಂದ ಸಾವಿರಾರು ಮಹಿಳೆಯರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ನೆರವಾಗಲಿದೆ
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ ವಿತರಿಸಲಾಗುವುದು. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ




