ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 05 : ಶಿಕ್ಷಕರು ಸಮಾಜದ ಶಿಲ್ಪಿಗಳು, ತ್ಯಾಗ, ಶ್ರಮ ಮತ್ತು ಮಾರ್ಗದರ್ಶನದಿಂದ ಇಂದಿನ ಮಕ್ಕಳ ಭವಿಷ್ಯವನ್ನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ನಗರದ ಗುರುಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕು ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರೆಂದರೆ ಬರೀ ಪಠ್ಯವನ್ನ ಭೋದಿಸುವವರಲ್ಲ. ಜೊತೆಗೆ ಜೀವನದ ಮೌಲ್ಯಗಳೊಂದಿಗೆ ಸರಿ, ತಪ್ಪನ್ನ ತಿಳಿ ಹೇಳಿ ದೇಶಕ್ಕೆ ಉತ್ತಮ ಪ್ರಜೆಯನ್ನ ರೂಪಿಸುವ ಗುರುಗಳಾಗಿದ್ದಾರೆ. ಇಂತಹ ಗುರುಗಳ ಸ್ಥಾನ ನಮ್ಮ ಜೀವನದಲ್ಲಿ ಯಾವಾಗಲೂ ಶ್ರೇಷ್ಠವಾಗಿರುತ್ತದೆ ಎಂದರು.
ತಾಲೂಕಿನ ಸರ್ಕಾರಿ ಶಾಲೆಗಳು ಹಾಗೂ ಶಾಲೆಗಳಲ್ಲಿ ಉತ್ತಮ ಗುಣಮಟ್ಟವನ್ನ ಕಾಯ್ದುಕೊಳ್ಳಬೇಕಾದರೆ ಶಿಕ್ಷಕರು ಸಹ ಸದಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು. ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಹೊಸ ಹೊಸ ವಿನೂತನ ವಿಧಾನಗಳನ್ನು ಶಾಲಾ ಬೋಧನೆಯಲ್ಲಿ ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಫಲಿತಾಂಶದತ್ತ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು. ಕ್ಷೇತ್ರದಲ್ಲಿ ಶಿಕ್ಷಣದ ಅಭಿವೃದ್ಧಿಗಾಗಿ ಯಾವುದೇ ಸೌಲಭ್ಯ ಅಗತ್ಯವಿದ್ದರೂ ಶಿಕ್ಷಣಕ್ಕೆ ನನ್ನ ಬೆಂಬಲ ಮತ್ತು ಆದ್ಯತೆ ಸದಾ ಇರುತ್ತದೆ ಎಂದು ಸಚಿವರು ತಿಳಿಸಿದರು.
ಅಂತರಾಷ್ಟ್ರೀಯ ಮಾನವ ಸಂಪನ್ಮೂಲ ತರಬೇತಿದಾರ ಡಾ.ಬಿಎಸ್. ಗುರುದಕ್ಷಿಣ್ , ತಾಲೂಕು ಪಂಚಾಯತಿ ಇಒ ಡಾ. ಜಿಕೆ ಪ್ರಮೋದ್ ಮಾತನಾಡಿದರು. ಕಾರ್ಯಕ್ರಮ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರದ ಬಿಇಒ ಕಛೇರಿಯಿಂದ ಬೆಳ್ಳಿ ರಥದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಮೆರವಣಿಗೆ ಗುರುಭವನದವರೆಗೂ ನಡೆಯಿತು. ಇದೇ ವೇಳೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಹಾಗೂ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ. ಸಿದ್ದೇಶ್, ನಗರಸಭೆ ಅಧ್ಯಕ್ಷ ಬಾಲಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಎಂಡಿ ಸಣ್ಣಪ್ಪ, ಮಮತಾ, ಸದಸ್ಯ ಈರಲಿಂಗೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕ್ಷೇತ್ರ ಸಮನ್ವಯ ಅಧಿಕಾರಿ ತಿಪ್ಪೇರುದ್ರಪ್ಪ, ದೈಹಿಕ ಶಿಕ್ಷಣಾಧಿಕಾರಿ ರವೀಂದ್ರನಾಯ್ಕ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷೆ ಭಾಗ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಕೆಆರ್ ತಿಪ್ಪೇಸ್ವಾಮಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲೋಹಿತ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಶಿಕ್ಷಣ ಸಂಯೋಜಕ ಸಿ.ಶಿವಾನಂದ್, ಗಿರೀಶ್, ರಾಧಾ ಸೇರಿದಂತೆ ಸಿಆರ್.ಪಿಗಳು ಹಾಗೂ ಸಿಆರ್.ಪಿಗಳು ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿಗಳು ಇದ್ದರು.





