ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 20 : ನಗರದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ವಿಶೇಷವಾಗಿದ್ದು, ಪೌರಕಾರ್ಮಿಕರ ಸೇವೆಗೆ ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ. ಪೌರ ಕಾರ್ಮಿಕರ ದಿನಾಚರಣೆಯ ಮೂಲಕ ಗೌರವಿಸುವುದರ ಜೊತೆಗೆ ಅವರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ಕ್ರೀಡಾಕೂಟ ಉದ್ಘಾಟಿಸಿ, ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.
ದಿನನಿತ್ಯದ ಪೌರಕಾರ್ಮಿಕರ ಸೇವೆ ಭಗವಂತನ ಪಾದಗಳಿಗೆ ಮುಟ್ಟಿದೆ. ನೂರಕ್ಕೆ ನೂರರಷ್ಟು ಪ್ರತಿಫಲ ಸಿಗುತ್ತದೆ. ಎಲ್ಲಿ ಸೇವೆ ಇದೆ ಅಲ್ಲಿ ಭಗವಂತ ಇದ್ದಾನೆ. ಪೌರ ಕಾರ್ಮಿಕರ ಜೀವನ ನಿರ್ವಹಣೆಗೆ ಜೊತೆಗೆ ಸಾರ್ವಜನಿಕರ ಸೇವೆ ಸಲ್ಲಿಸುವ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ನಗರಸಭೆ ಅಭಿವೃದ್ಧಿಗೆ ಮತ್ತು ಸ್ವಚ್ಛತೆಗೆ ನಿಮ್ಮ ಸಹಕಾರ ಪ್ರೋತ್ಸಾಹ ಸದಾ ಇರಲಿ, ನಗರಗಳ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಶುಚಿಯಾಗಿಡುತ್ತಿರುವ ಪೌರ ಕಾರ್ಮಿಕರ ಬದುಕನ್ನು ಹಸನು ಮಾಡಬೇಕಿರುವುದು ನಮ್ಮೆಲ್ಲರ ಹೊಣೆ ಎಂದು ಸಚಿವರು ತಿಳಿಸಿದರು.
ಪೌರಕಾರ್ಮಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಓಟದ ಸ್ಪರ್ಧೆ, ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೌರಾಯುಕ್ತ ಎ ವಾಸೀಂ, ನಗರಸಭೆ ಅಧ್ಯಕ್ಷ ಆರ್ ಬಾಲಕೃಷ್ಣ, ಉಪಾಧ್ಯಕ್ಷೆ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಈರಲಿಂಗೇಗೌಡ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಡಿ. ಸಣ್ಣಪ್ಪ, ಸದಸ್ಯರಾದ ಬಿಎನ್ ಪ್ರಕಾಶ್, ಶಿವರಂಜನಿ ಯಾದವ್, ಶಿವಕುಮಾರ್, ಪೌರಕಾರ್ಮಿಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಇದ್ದರು.


