ಇಲಾಖೆಯ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದ್ದು, ಪರೀಕ್ಷೆಯಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸಲು ಅವಕಾಶ ಇರುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.ಪರೀಕ್ಷಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಪರೀಕ್ಷಾರ್ಥಿಗಳು ಧಾರ್ಮಿಕ ಉಡುಪು ಧರಿಸುವುದನ್ನು ನಿಷೇಧಿಸಲಾಗಿದೆ. ಆದರೆ ಜನಿವಾರ, ಉಡುದಾರ, ಮಾಂಗಲ್ಯ ಸರ ಹಾಗೂ ಉಂಗುರ ಧರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಶೂ, ಜಾಕೆಟ್, ಫುಲ್ ಸ್ಲೀವ್ ಅಂಗಿ ಹಾಗೂ ಮಾಸ್ಕ್ ಧರಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಈ ಎಲ್ಲ ನಿಯಮಗಳನ್ನು ಪ್ರವೇಶ ಪತ್ರದ ಹಿಂಭಾಗದಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಳೆದ ಪರೀಕ್ಷೆಗಳಲ್ಲಿ ಎರಡು ನಿಮಿಷ ತಡವಾಗಿ ಬಂದ ವಿಚಾರ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಯ ವಿಳಂಬವನ್ನು ಪೇಪರ್ ಲೀಕ್ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಇಂತಹ ಅಪಪ್ರಚಾರಗಳು ಮರುಕಳಿಸದಂತೆ ಈ ಬಾರಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಕೂಡ ಪರೀಕ್ಷಾ ಕೊಠಡಿಯಲ್ಲೇ ಸುರಕ್ಷಿತವಾಗಿ ಇರಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವೃಂದಗಳ ಸುಮಾರು 3,400 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 2ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪರೀಕ್ಷೆ ಪಾರದರ್ಶಕ ಹಾಗೂ ಅಕ್ರಮರಹಿತವಾಗಿ ನಡೆಯಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ.
ಪರೀಕ್ಷೆಗೆ ಪ್ರಮುಖ ನಿಯಮಗಳು:
ಫುಲ್ ಸ್ಲೀವ್ ಅಂಗಿ ಹಾಗೂ ಶೂ ಧರಿಸುವುದು ನಿಷೇಧ.
ಮೊಬೈಲ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್, ಬ್ಯಾಗ್, ನೋಟ್ಸ್ ಹಾಗೂ ಆಹಾರ ಪದಾರ್ಥಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅವಕಾಶವಿಲ್ಲ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಯಾಗಲಿದೆ.
ಬ್ಲೂಟೂತ್ ಜಾಮರ್ಗಳನ್ನು ಅಳವಡಿಸಿ ಅಕ್ರಮ ತಡೆಯಲಾಗುವುದು.
ಪರೀಕ್ಷಾ ಅವಧಿಯಲ್ಲಿ ಸಮೀಪದ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿಶೇಷ ವೀಕ್ಷಕರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ನಿಗಾ ವಹಿಸಲಿವೆ. ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕುಡಿಯುವ ನೀರು, ಶೌಚಾಲಯ, ಬೆಳಕು ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರೀಕ್ಷಾರ್ಥಿಗಳು ಯಾವುದೇ ಗೊಂದಲ ತಪ್ಪಿಸಲು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ KEA ಮನವಿ ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











