ಕೋವಿಡ್ ನಿಂದ ಗುಣಮುಖರಾದವರಿಗೆ ಕ್ಷಯ ಸೋಂಕು : ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು..?

2 Min Read

ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ, ‘ವಿಶ್ವ ಕ್ಷಯರೋಗ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾದವರಿಗೆ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದಲೇ ಕ್ಷಯ ಪರೀಕ್ಷೆ ಮಾಡಲಾಗಿದೆ. *ಪರೀಕ್ಷೆಗೊಳಪಟ್ಟ 25 ಲಕ್ಷ ಜನರಲ್ಲಿ 144 ಜನರಿಗೆ ಕ್ಷಯ* ದೃಢಪಟ್ಟಿದೆ. ಕೋವಿಡ್ ಬಂದ ಬಳಿಕವೇ ಇವರಿಗೆ ಕ್ಷಯ ಬಂದಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ರಾಜ್ಯವನ್ನು ಕ್ಷಯ ಮುಕ್ತ ಮಾಡುವ ಗುರಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ಕೋವಿಡ್ ನಂತೆಯೇ ಕ್ಷಯವೂ ಸಾಂಕ್ರಾಮಿಕ ರೋಗ. ಕೋವಿಡ್ ವೈರಸ್ ನಿಂದ ಬಂದರೆ, ಕ್ಷಯವು ಬ್ಯಾಕ್ಟೀರಿಯಾದಿಂದ ಬರುತ್ತದೆ. 2030 ರ ವೇಳೆಗೆ ಜಗತ್ತನ್ನು ಕ್ಷಯರೋಗದಿಂದ ಮುಕ್ತ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು *2025 ರೊಳಗೆ ಭಾರತವನ್ನು ಕ್ಷಯ ಮುಕ್ತ ಮಾಡಬೇಕು* ಎಂಬ ಗುರಿ ಪ್ರಕಟಿಸಿದೆ. ಇದು ಕೇವಲ ವೈದ್ಯರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ. ಇದಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.

ಸಾಮಾನ್ಯವಾಗಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯಲಾಗುತ್ತದೆ. ಇದರ ಬದಲು ಲಕ್ಷಣಗಳು ಕಂಡುಬಂದ ಕೂಡಲೇ ಚಿಕಿತ್ಸೆ ಪಡೆಯಲು ಆರಂಭಿಸಬೇಕು. ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು. ಈಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ಪರೀಕ್ಷೆ ಮಾಡುವ ಸೌಲಭ್ಯವಿದೆ. ಜನರು ಇಂತಹ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.

ಗ್ರಾಮೀಣ ಭಾಗಗಳಲ್ಲಿ ಜನರು ಖಾಯಿಲೆ ಇದ್ದರೂ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸುವುದಿಲ್ಲ. ಒಬ್ಬ ಕ್ಷಯ ರೋಗಿಯಿಂದ ಕನಿಷ್ಠ 10 ಜನರಿಗೆ ರೋಗ ಹರಡಬಹುದು. ಹೀಗಾದಲ್ಲಿ, ಒಬ್ಬರ ತಪ್ಪಿನಿಂದ ಎಲ್ಲರಿಗೂ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕಿದೆ. ರಾಜ್ಯ ಸರ್ಕಾರ ರೋಗಗಳ ಬಗ್ಗೆ ಅರಿವು ಮೂಡಿಸಲು ವರ್ಷಕ್ಕೆ 5 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡುತ್ತಿದೆ ಎಂದರು.

*ರೋಗಿಯನ್ನು ದೂರ ಮಾಡಬಾರದು*

ಸಾಂಕ್ರಾಮಿಕ ರೋಗವೆಂದರೆ, ರೋಗಿಯ ವಿರುದ್ಧ ಯುದ್ಧ ಆರಂಭವಾಗಿಬಿಡುತ್ತದೆ. ಈ ರೀತಿಯ ಪರಿಸ್ಥಿತಿ ಸಮಾಜದಲ್ಲಿ ಉಂಟಾಗಬಾರದು. ಇದರಿಂದಾಗಿ ರೋಗಿಗಳು ಮಾನಸಿಕವಾಗಿ ಬಳಲುತ್ತಾರೆ. ಇಂತಹವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಕೋವಿಡ್ ಬಂದ ಬಳಿಕ ನಿಮ್ಹಾನ್ಸ್ ಸಂಸ್ಥೆಯು 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ನಡೆಸಿದೆ. ಇದೇ ರೀತಿ, ಕ್ಷಯದ ಚಿಕಿತ್ಸೆಯ ಜೊತೆಗೆ ರೋಗಿಗೆ ಹಾಗೂ ಕುಟುಂಬದವರಿಗೆ ಆಪ್ತ ಸಮಾಲೋಚನೆ ಮಾಡಬೇಕಿದೆ. ಕ್ಷಯ ಕಂಡುಬಂದ ಬಳಿಕ ಆ ಸೋಂಕು ರೋಗಿಯ ಮನೆಯವರಿಗೆ ಹರಡದಂತೆ ಎಚ್ಚರ ವಹಿಸಲು ಮಾರ್ಗದರ್ಶನ ನೀಡಬೇಕು ಎಂದರು.

Share This Article
Leave a Comment

Leave a Reply

Your email address will not be published. Required fields are marked *