ಸುದ್ದಿಒನ್,ತುಮಕೂರು,ಮೇ.18: ಸಂಬಂಧಿಕರ ಹುಡುಗನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತ ಮಗಳನ್ನು ತಂದೆಯೇ ಬಾವಿಗೆ ತಳ್ಳಿ ಕೊಲೆ ಮಾಡಿ, ಶವವನ್ನು ಹೂತಿಟ್ಟಿರುವ ಘಟನೆ ಶಿರಾ ತಾಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೇಘನಾ (17) ಕೊಲೆಯಾದ ದುರ್ದೈವಿ. ಕೊಲೆ ಆರೋಪಿ ತಂದೆ ತಿಮ್ಮರಾಯಪ್ಪನನ್ನು ಕಳ್ಳಂಬೆಳ್ಳ ಪೊಲೀಸರು ಬಂಧಿಸಿದ್ದಾರೆ.
ಮೇಘನಾ ತನ್ನ ತಾಯಿ ಕಡೆಯ ಸಂಬಂಧಿಕರ ಹುಡುಗನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ತಂದೆ ತಿಮ್ಮರಾಯಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಆಕೆ ಕೇಳಿರಲಿಲ್ಲ. ಹುಡುಗನ ಮನೆಯವರು ಮೇಘನಾಗೆ 18 ವರ್ಷ ತುಂಬಿದ ತಕ್ಷಣ ಮದುವೆ ಮಾಡಲು ಸೀರೆ, ತಾಳಿ ಖರೀದಿಸಿದ್ದರು. ಇದರಿಂದ ಆಕ್ರೋಶಗೊಂಡ ತಂದೆ, ಏಪ್ರಿಲ್ 16 ರಂದು ಮಗಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶವವನ್ನು ನಿರ್ಜನ ಪ್ರದೇಶದಲ್ಲಿ ಹೂತುಹಾಕಿ, ಮಗಳು ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದನು.

ಮಗಳು ಕಾಣೆಯಾದ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ಹೆದರಿ ತಂದೆ ತಿರುಪತಿ, ಧರ್ಮಸ್ಥಳದಲ್ಲಿ ತಲೆಮರೆಸಿಕೊಂಡಿದ್ದನು. ಇತ್ತೀಚೆಗೆ ಪತಿಯೂ ನಾಪತ್ತೆಯಾಗಿದ್ದಾನೆ ಎಂದು ತಾಯಿ ಮತ್ತೊಂದು ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ತಿಮ್ಮರಾಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಭೀಕರ ಕೊಲೆ ರಹಸ್ಯ ಬಯಲಾಗಿದೆ. ತಹಶೀಲ್ದಾರ್ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಡಿವೈಎಸ್ಪಿ ಶೇಖರ್ ತಿಳಿಸಿದ್ದಾರೆ.















