ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 31 : ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ಘಟಪರ್ತಿ ಪಂಚಾಯಿತಿ ವ್ಯಾಪ್ತಿಗೆ ಸೇರಿದ ವಲಸೆ ಗ್ರಾಮದಲ್ಲಿ ವಾಸಿಸುತ್ತಿರುವವರಿಗೆ ಇದುವರೆವಿಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದಿರುವುದನ್ನು ವಿರೋಧಿಸಿ ಭ್ರಷ್ಠಾಚಾರ ವಿರೋಧಿ ಆಂದೋಲನ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಭ್ರಷ್ಟಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳು ಕಳೆದಿದ್ದರೂ ಇನ್ನು ವಲಸೆ ಗ್ರಾಮದ ನಿವಾಸಿಗಳು ಮೂಲಭೂತ ಸೌಲಭ್ಯಗಳನ್ನು ಕಂಡಿಲ್ಲ. ಮಾದಿಗ ಸಮುದಾಯದ 70 ಮನೆಗಳಿದ್ದು, ಸ್ವಂತ ನಿವೇಶನವಾಗಲಿ, ಮನೆಯಾಗಲಿ ಇಲ್ಲ. ಪ್ರಧಾನಿ ಮೋದಿರವರು ಅದಾನಿ, ಅಂಬಾನಿಗಳ ಪರವಾಗಿದ್ದಾರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಜನಾಂಗವನ್ನು ನಿರ್ಲಕ್ಷಿಸುತ್ತಿವೆ. ಬಂಡವಾಳಶಾಹಿಗಳು
ಶ್ರೀಮಂತರ ಕೈಯಲ್ಲಿ ಅಧಿಕಾರವಿರುವುದರಿಂದ ಮೂಲಭೂತ ಸೌಕರ್ಯಗಳಿಗಾಗಿ ಬೀದಿಯಲ್ಲಿ ನಿಂತು ಹೋರಾಟ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಜಿಲ್ಲೆಯ ಮೂರು ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶವೆಂದು ಘೋಷಿಸಿದ್ದು, ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮುರು ತಾಲ್ಲೂಕನ್ನು ಇನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಈ ದೇಶದ ಸಂಪನ್ಮೂಲ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕೆಂದು ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ. ಜಾರಿಗೆ ಬರುತ್ತಿಲ್ಲ. ಅದಾನಿ ಅಂಬಾನಿಗೆ ಒಂದು ರೂ.ಗೆ ಒಂದು ಎಕರೆಯಂತೆ ಒಂದುವರೆ ಸಾವಿರ ಎಕರೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು?
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂ.ಗಳನ್ನು ಘೋಷಿಸಿದೆ. ಇದುವರೆವಿಗೂ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಹಿಂದಿನ ಸಂಸದ
ಎ.ನಾರಾಯಣಸ್ವಾಮಿ ಹಾಗೂ ಹಾಲಿ ಸಂಸದ ಗೋವಿಂದ ಎಂ.ಕಾರಜೋಳರವರು ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡ ಬಿ.ರಾಜಪ್ಪ, ಕೆಂಚಪ್ಪ ಮಾಸ್ಟರ್, ದೇವರಾಜ್ ನಗರಂಗೆರೆ, ಟಿ.ವೆಂಕಟೇಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಟಿ.ಮಂಜಣ್ಣ, ನ್ಯಾಯವಾದಿ ಸುರೇಶ್, ಹರೀಶ್ಕುಮಾರ್, ಗ್ರೀಸ್ ಮಲ್ಲಿಕಾರ್ಜುನ, ಜಯಣ್ಣ, ಮಹಂತೇಶ್, ಕರಿಯಣ್ಣ, ಇಮಾನ್ರೆಡ್ಡಿ, ಪೂಜಾರಿ ಲಕ್ಷ್ಮಣ, ರುದ್ರೇಶ್, ಬೊಮ್ಮಣ್ಣ, ಈಶ್ವರ, ಫಕೀರಪ್ಪ ವೀಣಗೌರಣ್ಣ, ಕೆ.ರುದ್ರಮುನಿ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.















