ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಆ. 18 : ಜಾಮೀನಿನ ಮೇಲಿರುವ ಹಾಗೂ ಅಕ್ರಮದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ನೈತಿಕತೆಯ ಕೊರತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ ಗುಂಡಾರ್ಪಿ ಟೀಕಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅನುದಾನ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ, ಪ್ರಸ್ತುತ ರಾಜ್ಯದಲ್ಲಿ ಅಧಿಕಾರ ದಲ್ಲಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಸಂಪುಟ ಪುನರ್ ರಚನೆಯ ವೈಫಲ್ಯವನ್ನು ಖಂಡಿಸಿ ಹೊಳಲ್ಕೆರೆ ಮಂಡಲದ ಅಡಿಯಲ್ಲಿ ನಡೆದ ಎರಡನೇ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರು, ರಾಜ್ಯ ಸರ್ಕಾರವು ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಗೆ ಮೀಸಲಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಕೇಂದ್ರದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಸಮಸ್ಯೆ ಎದುರಾದಾಗ ಸಂಬಂಧಪಟ್ಟ ಮಂತ್ರಿಗಳು ಜವಾಬ್ದಾರಿ ವಹಿಸಿಕೊಂಡು ಪರೀಕ್ಷೆಯನ್ನು ಮರು ಸಮೀಕ್ಷೆ ಗೊಳಪಡಿಸಿ ಯುವಕರ ಹಿತ ಕಾಯಲು ರಾಜೀನಾಮೆ ನೀಡಿದ ಉದಾಹರಣೆಯಿದೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ 180 ಕೋಟಿಗೂ ಹೆಚ್ಚು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿದ್ದರೂ, ಪ್ರಕರಣದ ಆರೋಪ ಎದುರಿಸುತ್ತಿರುವ ಸಚಿವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ, ಮನೆ, ಕೊಳವೆ ಬಾವಿ, ರಸ್ತೆ ಹಾಗೂ ಶಿಕ್ಷಣಕ್ಕೆ ಬಳಕೆಯಾಗ ಬೇಕಿದ್ದ ಎಸ್ಸಿಪಿ/ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಹಾಗೂ ಸಚಿವರು ತಮ್ಮ ಪಕ್ಷದ ಚುನಾ ವಣಾ ವೆಚ್ಚಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅರ್ಹ ಬಡವರಿಗೆ ತಲುಪ ಬೇಕಾದ ಸೌಲಭ್ಯಗಳನ್ನು ನೀಡದೆ, ಶ್ರೀಮಂತರಿಗೂ ಗ್ಯಾರಂಟಿ ಹಂಚಿ ಬೊಕ್ಕಸಕ್ಕೆ ಹೊರೆ ಮಾಡಲಾಗಿದೆ ಎಂದ ಅವರು ಜಿಲ್ಲೆಯಲ್ಲಿ ಹೆಚ್ಚು ಪಿಂಚಣಿದಾರರ ಪಿಂಚಣಿಯನ್ನು ರದ್ದುಗೊಳಿಸಲಾಗಿದೆ ಮತ್ತು ಬಡವರು ಜಮೀನಿಗಾಗಿ ಸಲ್ಲಿಸಿದ್ದ ಶೇಕಡಾ 95ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಕುಡಿಯುವ ನೀರಿನ ಅಭಾವವಿದ್ದರೂ ಸರ್ಕಾರ ಕೇವಲ ರಾಜಕೀಯ ಕಿತ್ತಾಟದಲ್ಲಿ ತೊಡಗಿದೆ ಎಂದು ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆದು ಸಂಪುಟದಿಂದ ಹೊರಗಿಡ ಬೇಕು ಹಾಗೂ ಬಡವರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂಬರುವ ಎಲ್ಲಾ ಸ್ಥಳೀಯ ಹಾಗೂ ರಾಜ್ಯ ಮಟ್ಟದ ಚುನಾವಣೆಗಳಲ್ಲಿ ಜನರೇ ಈ ಭ್ರಷ್ಟ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಡಾ.ಸಿದ್ದಾರ್ಥ ಗುಂಡಾರ್ಪಿ ಎಚ್ಚರಿಸಿದರು.
ಹೊಳಲ್ಕೆರೆ ಮಂಡಲ ಅಧ್ಯಕ್ಷ. ಡಿ.ಬಿ ಕುಮಾರ್ ಮಾತನಾಡಿ ನಾಗೇಂದ್ರ ಅವರು ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಪಕ್ಷದ ವತಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು, ನಾಗೇಂದ್ರ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ರಾಜೀನಾಮೆ ನೀಡುವವರೆಗೆ ತಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ನಾಗೇಂದ್ರ ಅವರು 187 ಕೋಟಿ ರೂ ಹಗರಣದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಅವರ ವಿರುದ್ಧ ಎಲ್ಲರೂ ಒಂದಾಗಿ ನಿಲ್ಲುವುದಾಗಿ ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ ಮಾತನಾಡಿ, ನಿಗಮಕ್ಕೆ ಸೇರಿದ ಸುಮಾರು 187 ಕೋಟಿ ರೂಪಾಯಿಗಳಷ್ಟು ಮೊತ್ತದ ಅನುದಾನ ದುರುಪಯೋಗವಾಗಿದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ, ಮುಖ್ಯವಾಗಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದ ಎಸ್ಸಿಪಿ ಮತ್ತು ಟಿಎಸ್ಪಿ ಹಣವನ್ನು ಅಕ್ರಮವಾಗಿ ಬೇರೆ ರಾಜ್ಯಗಳ ಚುನಾವಣಾ ವೆಚ್ಚಕ್ಕಾಗಿ ಬಳಸಿಕೊಳ್ಳಲಾಗಿದೆ ಸುಮಾರು 15 ರಿಂದ 20 ಅಕೌಂಟ್ಗಳಿಗೆ ಈ ಹಣವನ್ನು ಡೈವರ್ಟ್ ಮಾಡಲಾಗಿದೆ ಈ ಭ್ರಷ್ಟಾಚಾರಕ್ಕೆ ಪ್ರಸ್ತುತ ಆಡಳಿತಾರೂಢ ಸರ್ಕಾರವೇ ನೇರ ಹೊಣೆ ಎಂದು ದೂರಿದರು.
ರಾಜ್ಯಾದ್ಯಂತ ಬಿಜೆಪಿ ಹಾಗೂ ವಿವಿಧ ಸಮುದಾಯಗಳ ಒಕ್ಕೂಟದಿಂದ ಎರಡನೇ ದಿನವೂ ನಿರಂತರ ಪ್ರತಿಭಟನೆ ಮುಂದುವರಿದಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಪ್ರತ್ಯೇಕವಾಗಿ ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಹಾಗೂ ಈ ಹೋರಾಟವು ಮುಂದಿನ ಒಂದು ವಾರದಿಂದ 15 ದಿನಗಳ ಕಾಲ ಉಗ್ರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿ ಸಚಿವರ ರಾಜೀನಾಮೆ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಹೋರಾಟವನ್ನು ತಾಲೂಕು ಮಟ್ಟಕ್ಕೂ ವಿಸ್ತರಿಸಿ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಹೊಳಲ್ಕೆರೆ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷರಾದ ಚಿತ್ರಲಿಂಗಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯೋವಂತ ಕುಮಾರ್, ಯುವ ಮೋರ್ಚದ ಜಿಲ್ಲಾಧ್ಯಕ್ಷ ಆರುಣ್, ಭರಮಸಾಗರದ ಮಂಡಲ ಅಧ್ಯಕ್ಷರಾದ ಬಸವಂತಪ್ಪ ಯುವ ಮೋರ್ಚಾದ ಮಂಡಲ ಅಧ್ಯಕ್ಷರಾದ ಪ್ರತಾಪ್ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಬಸವೇಶ್, ದಗ್ಗೆ ಶಿವಪ್ರಕಾಶ್ ಲೀಲಾವತಿ, ಸುಮಾ, ಪರಶುರಾಮ್ ಸೇರಿದಂತೆ ಇತರರು ಭಾಗವಹಿಸಿದ್ದರು.












