ಬೆಂಗಳೂರು.ಜುಲೈ.06: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವು ತಾಲೂಕುಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಪ್ರಕಟಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಹವಾಮಾನದ ತೀವ್ರತೆಯನ್ನು ಗಮನಿಸಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜುಲೈ 6ರಂದು ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಪದವಿ ಪೂರ್ವ (ಪಿಯು) ಕಾಲೇಜುಗಳಿಗೂ ರಜೆ ನೀಡಿ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿಯೂ ವರುಣನ ಆರ್ಭಟ ಜೋರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಅವರು ಆದೇಶಿಸಿದ್ದಾರೆ.
ಅದೇ ರೀತಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ತಹಶೀಲ್ದಾರ್ ಸುಪ್ರಿತಾ ಅವರು ಆದೇಶ ಹೊರಡಿಸಿದ್ದಾರೆ.

















