ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕೊಡಿಸುವುದಕ್ಕಾಗಿ ಹಲವು ಚರ್ಚೆಗಳು ನಡೆಯುತ್ತಿದೆ. ಇದೀಗ ಹೆಚ್.ವಿಶ್ವನಾಥ್ ಹಾಗೂ ಕೆ.ಎಸ್.ಈಶ್ವರಪ್ಪ ಒಂದಾಗಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಸಂಬಂಧ ಇಂದು ಈಶ್ವರಪ್ಪ ಹಾಗೂ ವಿಶ್ವನಾಥ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ವಿಜಯಪುರದಲ್ಲಿ ಈ ತಿಂಗಳ 24ರಂದು ಒಂದು ಸಭೆಯನ್ನು ಕರೆದಿದ್ದೇವೆ. ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸುವ ಸಂಬಂಧಿಸಿದಂತೆ ಸಭೆ ಮಾಡುತ್ತೇವೆ. ಸಭೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಿ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಿ ಎಂದು ನಾವೂ ಕೇಳುತ್ತಿಲ್ಲ. ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಕೂಡ ಗೊಂದಲದಲ್ಲಿದ್ದಾರೆ. ಕುರುಬ ಸಮುದಾಯದ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಕೂಡ ಈಗಾಗಲೇ ನಡೆದಿದೆ. ಕುಲಶಾಸ್ತ್ರೀಯ ಅಧ್ಯಯನದಲ್ಲಿ ಕುರುಬ ಸಮುದಾಯ ತೀರಾ ಹಿಂದುಳಿದಿದ್ದು, ಬಡವಾಗಿದೆ ಎಂದು ಹೇಳಿದೆ. ಎಸ್ಟಿ ಸಮುದಾಯಕ್ಕೆ ಸೇರಿಸಬೇಕೆಂದು ಶಿಫಾರಸ್ಸು ಮಾಡಿದೆ. ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ನಾವೆಲ್ಲರೂ ಹೋರಾಟ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ಕೇಳಿ ನನಗೆ ಆಶ್ಚರ್ಯ ಆಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಾನು ಹೋರಾಟ ಮಾಡಿಲ್ಲ. ಮಿಸ್ಟರ್ ಈಶ್ವರಪ್ಪ ಹೋರಾಟ ಮಾಡಿದ್ದಾರೆ ಎಂದಿದ್ದಾರೆ. ನಿಜ ಅವ್ರು ಸತ್ಯ ಒಪ್ಪಿಕೊಂಡಿದ್ದಾರೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ. ಹೆಚ್.ವಿಶ್ವನಾಥ್ ಅವರು ಮಾತನಾಡಿ, ಎಸ್ಟಿ ಮೀಸಲಾತಿಗೆ ಒತ್ತಾಯಿಸಿದ್ದಾರೆ.

