ಶಿವಮೊಗ್ಗ: ಜಿಲ್ಲೆಯಲ್ಲಿಯೇ ಏರ್ಪೋರ್ಟ್ ಇದೆ. ಆದರೂ ಅಲ್ಲಿ ಇಳಿಯದೆ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಾರೆ, ಅಲ್ಲಿಂದ ಹುಬ್ಬಳ್ಳಿಗೆ ಹೋಗಿ ಬರಬೇಕಿದೆ. ಇದೇ ಸಮಸ್ಯೆಯ ಬಗ್ಗೆ ಇಂದು ಸಂಸದ ಬಿವೈ ರಾಘವೇಂದ್ರ ಧ್ವನಿ ಎತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ನಿರ್ವಹಣೆಗೆ ಕೊಟ್ಟು ದೊಡ್ಡ ತಪ್ಪು ಮಾಡಿಬಿಟ್ಟೆ. ನಿನ್ನೆ ವಿಮಾನವೂ ಶಿವಮೊಗ್ಗದಲ್ಲಿ ನಿಲ್ಲದೆ ಹುಬ್ಬಳ್ಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗವಾಗಿ ಬಂದೆ. ನಮ್ಮೂರಿನಲ್ಲಿಯೇ ವಿಮಾನ ನಿಲ್ದಾಣವಿದ್ದರೂ ಬೇರೊಂದು ಊರಿಗೆ ಹೋಗಿ ಬರಬೇಕಾದ ದುಸ್ಥಿತಿ ನಮ್ಮದು. ತಂದೆ ಮುಖ್ಯಮಂತ್ರಿ ಆಗಿದ್ದಾಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿಬಿಟ್ಟೆ. ಇದು ನಾನು ಮಾಡಿದ ದೊಡ್ಡ ತಪ್ಪು ಎಂದು ಈಗ ಅನಿಸಲಿ ಶುರುವಾಗಿದೆ. ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಿದ್ದರೆ ಎಲ್ಲಾ ಕೆಲಸಗಳು ಸುಗಮವಾಗುತ್ತಿತ್ತು.
ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಪೂರಕವಾದ ಉಪಕರಣಗಳನ್ನು ತರಿಸಿ ಮೂರು ತಿಂಗಳಾಗಿದೆ. ಇವುಗಳ ಅಳವಡಿಕೆಗೆ ಎರಡರಿಂದ ಮೂರು ಕೋಟಿ ರೂಪಾಯಿ ಅಗತ್ಯವಿದೆ. ಟೆಂಡರ್ ಕರೆಯಲು ವಿಳಂಬವಾಗುತ್ತಿದೆ. ಇದರ ಬದಲು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರೆ ಟೆಂಡರ್ ರಹಿತವಾಗಿ ಕಾಮಗಾರಿ ಪೂರ್ಣಗೊಳಿಸುತ್ತಿದ್ದರು. ಸರ್ಕಾರ ಒಂದು ಕೋಟಿ ರೂಪಾಯಿ ಕೊಡಲು ಸಂಪುಟ ಸಭೆ ನಡೆಸಬೇಕು ಎನ್ನುತ್ತಿದೆ. ರಾಜ್ಯ ಸರ್ಕಾರದಿಂದ ಹಣ ಕೊಡಲೂ ವಿಳಂಬವಾಗುತ್ತಿದೆ. ಕೆಲಸ ಆರಂಭಿಸಲೂ ತಡವಾಗುತ್ತಿದೆ. ಇದರಿಂದ ನಮಗೆ ದೊರೆಯಬೇಕಿದ್ದ ಅವಕಾಶ ಬೇರೆಯವರ ಪಾಲಾಗುತ್ತಿದೆ. ಸರ್ಕಾರ ಕೂಡಲೇ ನೈಟ್ ಲ್ಯಾಂಡಿಂಗ್ ಉಪಕರಣಗಳನ್ನು ಅಳವಡಿಸಿ ಕೊಡಬೇಕು. ಆ ಬಳಿಕ ದೆಹಲಿಯಲ್ಲಿ ಚರ್ಚೆ ನಡೆಸಿ ಮತ್ತಷ್ಟು ವಿಮಾನಗಳನ್ನು ತರಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.


