ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡ ಶಿಕ್ಷಕರಿಗೆ ಪ್ರತ್ಯೇಕ ಅವಕಾಶ ಕಲ್ಪಿಸದೆ, ಸಮಾಜ ವಿಜ್ಞಾನ ಶಿಕ್ಷಕರಿಂದಲೇ ಕನ್ನಡ ಬೋಧನೆಗೆ ಅವಕಾಶ ನೀಡಿರುವ ಶಿಕ್ಷಣ ಇಲಾಖೆಯ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಾತನಾಡಿ, ಶಿಕ್ಷಣ ಇಲಾಖೆಯ ಈ ನಿರ್ಧಾರ ಕನ್ನಡ ಭಾಷೆ ಹಾಗೂ ಕನ್ನಡ ಪದವೀಧರರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. “ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಲೆ ಕೆಟ್ಟಿದೆಯೇ? ಕನ್ನಡ ಶಿಕ್ಷಕರ ನೇಮಕಾತಿಗೆ ಅವಕಾಶವೇ ಇಲ್ಲ ಎನ್ನುವುದರ ಅರ್ಥವೇನು? ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಸರ್ಕಾರ ತೀವ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಕನ್ನಡ ಐಚ್ಛಿಕ ವಿಷಯದಲ್ಲಿ ಪದವಿ, ಬಿ.ಎಡ್. ಹಾಗೂ ಟಿಇಟಿ ಸೇರಿದಂತೆ ಅಗತ್ಯ ಅರ್ಹತೆಗಳನ್ನು ಪಡೆದು ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಈ ನಿರ್ಧಾರದಿಂದ ಅರ್ಜಿ ಸಲ್ಲಿಸುವ ಅವಕಾಶವೇ ಕಳೆದುಹೋಗಿದೆ ಎಂದು ಅವರು ಹೇಳಿದರು.”ಇದು ಕೇವಲ ಉದ್ಯೋಗದ ಪ್ರಶ್ನೆಯಲ್ಲ; ಕನ್ನಡ ಭಾಷೆಯ ಅಸ್ತಿತ್ವದ ಪ್ರಶ್ನೆಯಾಗಿದೆ. ಕನ್ನಡಕ್ಕೆ ತನ್ನದೇ ಆದ ಸಾಹಿತ್ಯ, ವ್ಯಾಕರಣ, ಭಾಷಾ ವೈಜ್ಞಾನಿಕ ಹಿನ್ನೆಲೆ ಹಾಗೂ ವಿಶಿಷ್ಟ ಬೋಧನಾ ವಿಧಾನವಿದೆ. ಆದ್ದರಿಂದ ಕನ್ನಡ ವಿಷಯವನ್ನು ಕನ್ನಡದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರೇ ಬೋಧಿಸಬೇಕು. ಸಮಾಜ ವಿಜ್ಞಾನ ಶಿಕ್ಷಕರಿಗೆ ಕನ್ನಡ ಬೋಧನೆಯ ಜವಾಬ್ದಾರಿ ನೀಡುವುದು ಶಿಕ್ಷಣದ ಗುಣಮಟ್ಟಕ್ಕೂ ಧಕ್ಕೆ ತರುತ್ತದೆ” ಎಂದು ನಾರಾಯಣಗೌಡ ಅಭಿಪ್ರಾಯಪಟ್ಟರು.
ಆಕ್ಷೇಪಣೆ ಸಲ್ಲಿಸಲು ಇನ್ನೆರಡು ದಿನಗಳು ಮಾತ್ರ ಉಳಿದಿರುವುದರಿಂದ ಕನ್ನಡಪರ ಸಂಘಟನೆಗಳು, ಕನ್ನಡ ಪದವೀಧರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಕ್ಷೇಪಣೆ ಸಲ್ಲಿಸಿ ಈ ನಿರ್ಧಾರವನ್ನು ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.
ಸರ್ಕಾರ ಕನ್ನಡ ಶಿಕ್ಷಕರ ಹುದ್ದೆಗಳನ್ನು ಸಮಾಜ ವಿಜ್ಞಾನ ಶಿಕ್ಷಕರಿಗೆ ವರ್ಗಾಯಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆದು, ಕನ್ನಡ ವಿಷಯಕ್ಕೆ ಪ್ರತ್ಯೇಕ ಶಿಕ್ಷಕರ ನೇಮಕಾತಿ ನಡೆಸಬೇಕು. ಅರ್ಹ ಕನ್ನಡ ಪದವೀಧರರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಟಿ.ಎ. ನಾರಾಯಣಗೌಡ ಎಚ್ಚರಿಸಿದರು.










