ಸುದ್ದಿಒನ್,ಬೆಂಗಳೂರು,ಮೇ.22: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಬಾಕಿ ಹಣದ ವಿಳಂಬಕ್ಕೆ ಬೇಸತ್ತು ಮಹಿಳೆಯರು ಈಗ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಎರಡು ತಿಂಗಳ ಪ್ರೋತ್ಸಾಹ ಧನ ಹಸ್ತಾಂತರವಾಗದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಸಂಬಂಧ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮನೆಯ ಯಜಮಾನಿಗೆ ಮಾಸಿಕ 2,000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಯಡಿ, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ತಮಗೆ ತಲುಪಿಲ್ಲ ಎಂದು ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್ನ ಜಿ.ಡಿ. ಪವಿತ್ರಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.
ಬಾಕಿ ಇರುವ ಎರಡು ತಿಂಗಳ ಹಣವನ್ನು ತಕ್ಷಣವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಅವರು ಅರ್ಜಿಯಲ್ಲಿ ವಿನಂತಿಸಿದ್ದರು. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ಅಧಿಕೃತ ನೋಟಿಸ್ ಜಾರಿ ಮಾಡಿದ್ದು, ಲಿಖಿತ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.






