ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನೀವುಗಳು ನಾಯಕರಾಗಿ. ಸೋಲು-ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ಗೌಡ ಕರೆ ನೀಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಹುಲ್ಗಾಂಧಿ ಯುವ ಜನಾಂಗಕ್ಕೆ ಪಕ್ಷದಲ್ಲಿ ಆದ್ಯತೆ ನೀಡಿದ್ದಾರೆ. ಬ್ಲಾಕ್, ಬೂತ್ ಮಟ್ಟದಲ್ಲಿ ಯುತ್ ಕಾಂಗ್ರೆಸ್ನ್ನು ಸಂಘಟಿಸಿ. 2028 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ. ಉಚಿತ ಗ್ಯಾರೆಂಟಿಗಳಿಂದ 44 ಸಾವಿರ ಕೋಟಿ ರೂ.ಬಡವರ ಮನೆಗಳಿಗೆ ತಲುಪಿದೆ. ಜಿಲ್ಲೆಯಲ್ಲಿ ನಾಲ್ಕು ಕೋಟಿ 36 ಲಕ್ಷ ರೂ.ಗಳನ್ನು ಶಕ್ತಿ ಯೋಜನೆಗೆ ನೀಡಿದೆ. ಬಿಜೆಪಿ. ಆರ್.ಎಸ್.ಎಸ್.ನವರು ಅಂಬೇಡ್ಕರ್, ಸಂವಿಧಾನ, ಗಾಂಧಿಯನ್ನು ದೂರವಿಡುವ ಕೆಲಸ ಮಾಡುತ್ತಿರುವುದನ್ನು ಯೂತ್ ಕಾಂಗ್ರೆಸ್ ಸಹಿಸುವುದಿಲ್ಲ. ಕಾಂಗ್ರೆಸ್ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ನಾಯಕರುಗಳಿಗೆ ಯುವ ಕಾಂಗ್ರೆಸ್ ಬುನಾದಿ ಎಂದು ಹೇಳಿದರು.
ಜಾತಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವ ಬಿಜೆಪಿ. ಸಾಮರಸ್ಯವನ್ನು ಕೆಡಿಸುತ್ತಿದೆ. ಇದರ ವಿರುದ್ದ ಯುವ ಕಾಂಗ್ರೆಸ್ ಜನತೆಯಲ್ಲಿ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.
ಕರ್ನಾಟಕ ಉಸ್ತುವಾರಿ ಹಿಮಾಚಲ ಪ್ರದೇಶದ ನಿಗಮ್ ಭಂಡಾರಿ ಮಾತನಾಡಿ ರಾಹುಲ್ಗಾಂಧಿ ಯೂತ್ಸ್ಗಳಿಗೆ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿಚಾರ, ತತ್ವ ಸಿದ್ದಾಂತಗಳನ್ನು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತಲುಪಿಸಿ ಶೋಷಿತರು, ರೈತರು, ಮಹಿಳೆಯರ ಪರವಾಗಿ ನಿಲ್ಲಬೇಕು. ದೇಶದ ಪ್ರಧಾನಿ ನರೇಂದ್ರಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವ ಸಮೂಹವನ್ನು ನಂಬಿಸಿ ವಂಚಿಸಿದ್ದಾರೆ. ಕೊಟ್ಟ ಭರವಸೆ ಯಾವುದು ಈಡೇರಿಲ್ಲ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಉಳಿಸಿಕೊಂಡು ಐದು ಉಚಿತ ಗ್ಯಾರೆಂಟಿಗಳನ್ನು ನೀಡಿದೆ. ಕೇಂದ್ರ ಬಿಜೆಪಿ. ಸರ್ಕಾರದ ತಪ್ಪು ನಿರ್ಧಾರಗಳನ್ನು ಜನರಿಗೆ ಮನವರಿಕೆ ಮಾಡಿ ಜಾಗೃತಿಗೊಳಿಸಿ ಎಂದರು.
ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಮಾತನಾಡುತ್ತ ರಾಹುಲ್ಗಾಂಧಿ ಪಕ್ಷದಲ್ಲಿ ಯುವಕರಿಗೆ ಪ್ರಾಧಾನ್ಯತೆ ನೀಡಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರು ನೊಂದಣಿಯಾಗಿದ್ದಾರೆ. ಪ್ರತಿ ಬೂತ್ನಲ್ಲಿಯೂ ಯುವ ಕಾಂಗ್ರೆಸ್ ಶಾಖೆ ತೆರೆದು ಪಕ್ಷ ಸಂಘಟಿಸಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವುದಾಗಿ ಭರವಸೆ ನೀಡಿದರು.
ಯೂತ್ ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿರುವವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಬಲಪಡಿಸುತ್ತೇವೆ. ನಿಗಮ ಮಂಡಳಿಗಳ ನೇಮಕದಲ್ಲಿ ಯುವ ಕಾಂಗ್ರೆಸ್ನ್ನು ಪರಿಗಣಿಸುವಂತೆ ರಾಜ್ಯಾಧ್ಯಕ್ಷ ಮಂಜುನಾಥ್ಗೌಡರವರಲ್ಲಿ ವಿನಂತಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ ಕಾಂಗ್ರೆಸ್ ಪಕ್ಷದ ಸಾಧನೆಗೆ ಬಿಜೆಪಿ.ಯಿಂದ ಚ್ಯುತಿ ಬರುತ್ತಿದೆ. ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ರಾಹುಲ್ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ನಾಲ್ಕು ಸಾವಿರ ಕಿ.ಮೀ. ಪಾದಯಾತ್ರೆ ನಡೆಸಿ ಯುವಕರಲ್ಲಿ ಉತ್ಸಾಹ ತುಂಬಿದ್ದಾರೆ. ಉಚಿತ ಗ್ಯಾರೆಂಟಿಗಳಿಂದ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ಪಕ್ಷ ಗೆದ್ದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎ.ವಿ.ಉಮಾಪತಿ ಮಾತನಾಡುತ್ತ ರಾಜೀವ್ಗಾಂಧಿ ಯುವ ಕಾಂಗ್ರೆಸ್ನಿಂದ ಬೆಳೆದು ದೇಶದ ಪ್ರಧಾನಿಯಾದರು. ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡ ಚುನಾವಣೆಯಲ್ಲಿ ಐದು ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಕಾಂಗ್ರೆಸ್ ದೇಶದ ಶಕ್ತಿ. ಚುನಾವಣೆಯಲ್ಲಿ ಮನೆ ಮನೆಗೆ ಹೋಗಿ ಜನರನ್ನು ಕರೆ ತಂದು ಮತ ಹಾಕಿಸುವ ಕೆಲಸ ಮಾಡುವವರು ಯುವಕರು. ಇಂದಿರಾಗಾಂಧಿ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಐದು ಉಚಿತ ಗ್ಯಾರೆಂಟಿಗಳಿಂದ ಬಡವರು ಬದುಕು ಕಟ್ಟಿಕೊಂಡಿದ್ದಾರೆಂದು ಹೇಳಿದರು.
ವೈಶಾಖ್ ಯಾದವ್, ಸಂದೀಪ್, ಉಸ್ತುವಾರಿ ನಜ್ಮ, ಬಾಹುಬಲಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಡಾ.ದಾದಾಪೀರ್ ಸೇರಿದಂತೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರುಗಳು ವೇದಿಕೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















